ಪ್ರಯಾಗರಾಜ್ನಲ್ಲಿ ಪ್ರವಾಹ ಪೀಡಿತ ಪ್ರದೇಶದಿಂದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುತ್ತಿರುವ ದೃಶ್ಯ
– ಪಿಟಿಐ ಚಿತ್ರ
ಲಖನೌ: ನಿರಂತರ ಮಳೆಯಿಂದಾಗಿ ಉತ್ತರ ಪ್ರದೇಶದ 13 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಭಾನುವಾರ ಮತ್ತು ಸೋಮವಾರ 11 ಮಂದಿ ಮೃತಪಟ್ಟಿದ್ದಾರೆ.
ಸೀತಾಪುರ ಜಿಲ್ಲೆಯಲ್ಲಿ ಮಳೆಯಿಂದಾಗಿ ಸೋಮವಾರ ಮನೆಯೊಂದರ ಗೋಡೆ ಕುಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಉಳಿದ 9 ಮಂದಿ ವಿವಿಧ ಜಿಲ್ಲೆಗಳಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವಿಗೀಡಾಗಿದ್ದಾರೆ.
ಗಂಗಾ, ಯಮುನಾ, ಬೆಟ್ವಾ ಸೇರಿದಂತೆ ಪ್ರಮುಖ ನದಿಗಳು ಹಲವೆಡೆ ಅಪಾಯದ ಮಟ್ಟ ಮೀರಿ ಹರಿಯತ್ತಿದ್ದು, ಪ್ರವಾಹದ ಭೀತಿ ಹೆಚ್ಚಿಸಿದೆ.
ಭಾನುವಾರ ರಾಜ್ಯದಲ್ಲಿ 1.42 ಸೆ.ಮೀ ಮಳೆಯಾಗಿದ್ದು, 24 ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಹೀಗಾಗಿ ಲಖನೌ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ವಾರಾಣಸಿ, ಪ್ರಯಾಗರಾಜ್ ಹಾಗೂ ಇತರೆ ಪ್ರದೇಶಗಳಲ್ಲಿ ಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ರಸ್ತೆಗಳು ಜಲಾವೃತಗೊಂಡಿವೆ.
ವಾರಾಣಸಿಯಲ್ಲಿರುವ ನಮೋ ಘಾಟ್ ಜಲಾವೃತಗೊಂಡಿರುವುದರಿಂದ, ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಮಣಿಕರ್ಣಿಕಾ ಘಾಟ್ ಕೂಡ ಜಲಾವೃತವಾಗಿದ್ದರಿಂದ ಶವಸಂಸ್ಕಾರಕ್ಕೆ ಅಡಚಣೆಯಾಗಿದೆ.
ಆಗ್ರಾ, ಚಿತ್ರಕೂಟ, ಲಖಿಂಪುರ ಖೇರಿ, ಬಲಿಯಾ, ಘಾಜಿಯಾಪುರ ಸೇರಿದಂತೆ 17 ಜಿಲ್ಲೆಗಳ ಒಟ್ಟು 402 ಗ್ರಾಮಗಳು ಪ್ರವಾಹದಿಂದ ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರವಾಹದ ಸಂತ್ರಸ್ತರಿಗೆ ಅಗತ್ಯ ನೆರವು ನೀಡುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. 500 ಹಡಗು, ಮೋಟರ್ ಹಡಗುಗಳ ಮೂಲಕ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ರವಾನಿಸಲಾಗುತ್ತಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.