ADVERTISEMENT

20 ಲಕ್ಷ ವಲಸೆ ಕಾರ್ಮಿಕರಿಗೆ ಉದ್ಯೋಗ ದೊರಕಿಸಿಕೊಡಲು ಉತ್ತರ ಪ್ರದೇಶ ಸರ್ಕಾರ ಯೋಜನೆ

ಏಜೆನ್ಸೀಸ್
Published 10 ಮೇ 2020, 5:49 IST
Last Updated 10 ಮೇ 2020, 5:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಲಖನೌ: ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಮರಳುತ್ತಿರುವ 20 ಲಕ್ಷ ವಲಸೆ ಕಾರ್ಮಿಕರಿಗೆ ಉದ್ಯೋಗ ದೊರಕಿಸಿಕೊಡಲು ಯೋಜನೆ ರೂಪಿಸುತ್ತಿರುವುದಾಗಿ ಉತ್ತರ ಪ್ರದೇಶ ಸರ್ಕಾರ ಘೋಷಿಸಿದೆ. ಈಗಾಗಲೇ ಅನೇಕ ಕಾರ್ಮಿಕರು ವಿವಿಧ ರಾಜ್ಯಗಳಿಂದ ಉತ್ತರ ಪ್ರದೇಶ ತಲುಪಿದ್ದಾರೆ.

‘ಅವರ ಗ್ರಾಮಗಳು, ಪಟ್ಟಣಗಳಲ್ಲೇ ಉದ್ಯೋಗ ದೊರಕಿಸಿಕೊಡಲು ನೀತಿ ರೂಪಿಸಲಾಗುತ್ತಿದೆ. ಕಾರ್ಮಿಕರ ಕೌಶಲಕ್ಕೆ ಸಂಬಂಧಿಸಿದಂತೆ ದತ್ತಾಂಶ ರೂಪಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ₹15,000 ಕನಿಷ್ಠ ವೇತನದೊಂದಿಗೆ ಉದ್ಯೋಗ ನೀಡಲಾಗುವುದು’ ಎಂದು ರಾಜ್ಯ ಸರ್ಕಾರದ ಪ್ರಕಟಣೆ ತಿಳಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಶನಿವಾರ ಸರ್ಕಾರ ಈ ಪ್ರಕಟಣೆ ಬಿಡುಗಡೆ ಮಾಡಿದೆ.

ಹೊಸ ಉದ್ಯಮಗಳಲ್ಲಿ ಮಾತ್ರವಲ್ಲ, ಈಗಾಗಲೇ ಅಸ್ತಿತ್ವದಲ್ಲಿರುವ ಘಟಕಗಳಲ್ಲಿಯೂ ನೇಮಕಾತಿ ಮಾಡಿಕೊಳ್ಳಲಾಗುವುದು. ಗಾರ್ಮೆಂಟ್ ಫ್ಯಾಕ್ಟರಿಯೂ ಸೇರಿದಂತೆ ಸುಗಂಧ ದ್ರವ್ಯ, ಧೂಪದ ಕಡ್ಡಿ ತಯಾರಿಕೆ, ಕೃಷಿ ಉತ್ಪನ್ನಗಳು, ಆಹಾರ ಪ್ಯಾಕಿಂಗ್, ಹೂವು ಆಧಾರಿತ ಉತ್ಪನ್ನಗಳು, ಕಾಂಪೋಸ್ಟ್ ಮತ್ತು ರಾಸಾಯನಿಕ ಗೊಬ್ಬರ ತಯಾರಿಕೆ ಉದ್ಯಮಗಳಲ್ಲಿ ಉದ್ಯೋಗ ದೊರಕಿಸಿಕೊಡಲು ನೀತಿ ರೂಪಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ಚೀನಾ, ಬಾಂಗ್ಲಾದೇಶ, ವಿಯೆಟ್ನಾಂ ದೇಶಗಳಲ್ಲಿರುವುದಕ್ಕಿಂತಲೂ ಚೆನ್ನಾಗಿ ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ಉದ್ದಿಮೆಗಳನ್ನು ಅಭಿವೃದ್ಧಿಪಡಿಸುವತ್ತ ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಸ್ವಸಹಾಯ ಸಂಘಗಳ ಮೂಲಕವೂ ಕಾರ್ಮಿಕರಿಗೆ ಉದ್ಯೋಗ ನೀಡಲಾಗುವುದು ಎಂದು ಪ್ರಕಟಣೆ ಉಲ್ಲೇಖಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.