ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಪಡೆದಿರುವ ಬಿಜೆಪಿಯ ಶಾಸಕರು ಮಾರ್ಚ್ 24ರಂದು ಸಭೆ ಸೇರಲಿದ್ದು, ಯೋಗಿ ಆದಿತ್ಯನಾಥ್ ಅವರನ್ನು ತಮ್ಮ ನಾಯಕನಾಗಿ ಅಧಿಕೃತವಾಗಿ ಆಯ್ಕೆ ಮಾಡಲಿದ್ದಾರೆ ಎಂದು ವರದಿಯಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಉಪಾಧ್ಯಕ್ಷ ರಘುವರ್ ದಾಸ್ ಅವರು ಶಾಸಕರ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಪಕ್ಷದ ಮೂಲಗಳ ಪ್ರಕಾರ, ಯೋಗಿ ಆದಿತ್ಯನಾಥ್ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಮಾರ್ಚ್ 24ರಂದು ಅಧಿಕೃತವಾಗಿ ಆಯ್ಕೆಯಾಗಲಿದ್ದಾರೆ. ಅನಂತರ ಸರ್ಕಾರ ರಚನೆಗಾಗಿ ರಾಜ ಭವನಕ್ಕೆ ಮನವಿ ಮಾಡಲಿದ್ದಾರೆ. ಬಳಿಕ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರಿಂದ ಸರ್ಕಾರ ರಚನೆಗೆ ಆಹ್ವಾನ ಬರಲಿದೆ.
ಆಡಳಿತ ವಿರೋಧಿ ಅಲೆಯನ್ನು ಮೆಟ್ಟಿನಿಂತು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿರುವ ಯೋಗಿ ಆದಿತ್ಯನಾಥ್ ಅವರು ಮಾರ್ಚ್ 25ರಂದು ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ತನ್ಮೂಲಕ ಯೋಗಿ ಅವರು 2ನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ–ಸಂಗತ | ದಲಿತ ರಾಜಕಾರಣ: ಆಳದಲ್ಲಿ ಪಲ್ಲಟ
ಮಾ.25ರಂದು ರಾಜ್ಯ ರಾಜಧಾನಿ ಲಖನೌನಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಇಕಾನ ಕ್ರೀಡಾಂಗಣದಲ್ಲಿ ಸಂಜೆ 4 ಗಂಟೆಗೆ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿದೆ.
ಪದಗ್ರಹಣ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಇನ್ನಿತರ ಪ್ರಮುಖ ನಾಯಕರು ಭಾಗವಹಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ಬಿಜೆಪಿ ಆಡಳಿತದ ಮುಖ್ಯಮಂತ್ರಿ ಹಾಗೂ ಪ್ರಮುಖ ಪಕ್ಷಗಳ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.
403 ವಿಧಾನಸಭೆ ಕ್ಷೇತ್ರಗಳ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ 255 ಮತ್ತು ಅದರ ಮಿತ್ರ ಪಕ್ಷಗಳು 18 ಕ್ಷೇತ್ರಗಳನ್ನು ಜಯಿಸಿದ್ದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.