ಡೆಹ್ರಾಡೂನ್: ಹಿಮನದಿ ಸ್ಫೋಟಕ್ಕೆ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಸದ್ಯ ರಕ್ಷಣಾ ಕಾರ್ಯಾಚರಣೆ, ಜನರ ಜೀವ ಉಳಿಸುವ ಕಾರ್ಯಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಹೇಳಿದ್ದಾರೆ.
ಕಣ್ಮರೆಯಾಗಿರುವವರ ಶೋಧ ನಡೆಸುವುದಕ್ಕಾಗಿ ಶ್ವಾನ ದಳವನ್ನೂ ನಿಯೋಜಿಸಲಾಗಿದೆ. ಚಮೋಲಿಯ ತಪೋವನ ಅಣೆಕಟ್ಟೆ ಬಳಿ ಶ್ವಾನ ದಳದ ಸಹಾಯದೊಂದಿಗೆ ಶೋಧ ಕಾರ್ಯ ನಡೆಯುತ್ತಿದೆ. ನೂರಾರು ಇಂಡೊ–ಟಿಬೆಟನ್ ಗಡಿ ಪೊಲೀಸ್ (ಐಟಿಬಿಪಿ) ಸಿಬ್ಬಂದಿಯೂ ಶೋಧಕಾರ್ಯದಲ್ಲಿ ನಿರತರಾಗಿದ್ದಾರೆ.
ರಿಷಿಕೇಶ ಮತ್ತು ಹರಿದ್ವಾರಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಹಿಮನದಿ ಸ್ಫೋಟದಿಂದ ಉಂಟಾದ ದಿಢೀರ್ ಪ್ರವಾಹಕ್ಕೆ ಸಿಲುಕಿ 7 ಮಂದಿ ಮೃತಪಟ್ಟಿದ್ದು, 125 ಮಂದಿ ಕಣ್ಮರೆಯಾಗಿದ್ದಾರೆ. ಕಣ್ಮರೆಯಾದವರ ಪತ್ತೆಗೆ ಶೋಧಕಾರ್ಯ ನಡೆಯುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.