ADVERTISEMENT

ಉತ್ತರಾಖಂಡ ದುರಂತ: ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆ, 204 ಮಂದಿ ನಾಪತ್ತೆ

ಏಜೆನ್ಸೀಸ್
Published 11 ಫೆಬ್ರುವರಿ 2021, 9:05 IST
Last Updated 11 ಫೆಬ್ರುವರಿ 2021, 9:05 IST
ಉತ್ತರಾಖಂಡದಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪ
ಉತ್ತರಾಖಂಡದಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪ   

ಚಮೋಲಿ (ಉತ್ತರಾಖಂಡ): ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನೀರ್ಗಲ್ಲು ಕುಸಿತದ ಪರಿಣಾಮ ಸಂಭವಿಸಿರುವ ಪ್ರವಾಹ ದುರಂತದಲ್ಲಿ ಇದುವರೆಗೆ (ಗುರುವಾರ) ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದ್ದು, 204 ಮಂದಿ ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ಸಚಿವಾಲಯ ಗುರುವಾರ ತಿಳಿಸಿದೆ.

34 ಮೃತದೇಹಗಳ ಪೈಕಿ 10 ಮಂದಿಯನ್ನು ಗುರುತಿಸಲಾಗಿದ್ದು, 24 ಮೃತದೇಹವನ್ನು ಗುರುತಿಸಲು ಸಾಧ್ಯವಾಗಿಲ್ಲ.

ಈ ನಡುವೆ ರಿಷಿ ಗಂಗಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಸುರಕ್ಷಿತವಾಗಿ ಹಿಂತಿರುಗಿದ್ದಾರೆ ಎಂದು ತಿಳಿಸಿದೆ.

ADVERTISEMENT

ತಪೋವನ ಸುರಂಗದೊಳಗೆ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಇನ್ನು ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಳ್ಳುವ ಸಾಧ್ಯತೆಯಿದೆ. ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ ಲಿಟಟೆಡ್ (ಎನ್‌ಟಿಪಿಸಿ) ಕೊರೆಯುವ ಯಂತ್ರದೊಂದಿಗೆ ಕಾರ್ಮಿಕರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಮಗ್ನವಾಗಿದೆ ಎಂದು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್‌ (ಐಟಿಬಿಪಿ) ಡಿಐಜಿ ಅಪರ್ಣಾ ಕುಮಾರ್ ತಿಳಿಸಿದ್ದಾರೆ.

ಈ ನಡುವೆ ಚಮೋಲಿ ಜಿಲ್ಲೆಯಲ್ಲಿ ಸಂಪರ್ಕ ಕಡಿತಗೊಂಡ ಹಳ್ಳಿಗಳಲ್ಲಿ ಐಟಿಬಿಪಿ ಸೇತುವೆ ನಿರ್ಮಿಸುವ ಕಾಮಗಾರಿಗೆ ಚಾಲನೆ ನೀಡಿದೆ. ಸೇತುವೆ ಮೂಲಕ ಒಂದು ಕಡೆಯಿಂದ ಇನ್ನೊಂದು ಕಡೆಗೆ ಆಹಾರ ಪೂರೈಸಲು ನೆರವಾಗಲಿದೆ.

ಅವಶೇಷಗಳು ಕೆಸರಿನಿಂದ ಕೂಡಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ಹಿನ್ನಡೆಯಾಗುತ್ತಿದೆ. ಸೇನೆ ಹಾಗೂ ರಕ್ಷಣಾ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಗೆ ನೇತೃತ್ವ ವಹಿಸುತ್ತಿದೆ.

ಕಳೆದ ಭಾನುವಾರ ಚಮೋಲಿ ಜಿಲ್ಲೆಯ ತಪೋವನ ರೈನಿ ಪ್ರದೇಶದಲ್ಲಿ ಭಾನುವಾರ ನೀರ್ಗಲ್ಲು ಕುಸಿತದ ಪರಿಣಾಮ ಧೌಲಿಗಂಗಾ ಹಾಗೂ ಅಲಕಾನಂದ ನದಿಗಳಲ್ಲಿ ಭಾರಿ ಪ್ರವಾಹಕ್ಕೆ ಕಾರಣವಾಗಿತ್ತು. ಈ ನೈಸರ್ಗಿಕ ವಿಕೋಪಕ್ಕೆ ಅಪಾರ ನಾಶ-ನಷ್ಟ ಅಂದಾಜಿಸಲಾಗಿದ್ದು, ಹತ್ತಿರದ ರಿಷಿಗಂಗಾ ವಿದ್ಯುತ್ ಯೋಜನೆಗೂ ಹಾನಿಯುಂಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.