ADVERTISEMENT

ಉತ್ತರಾಖಂಡ: ಚಂಪಾವತ್‌ನಲ್ಲಿ ಭೂಕುಸಿತ, ನೂರಾರು ಮಂದಿಗೆ ಸಂಕಷ್ಟ

ಪಿಟಿಐ
Published 21 ಜುಲೈ 2021, 11:22 IST
Last Updated 21 ಜುಲೈ 2021, 11:22 IST
ಸಾಂದರ್ಭಿಕ ಚಿತ್ರ (ಪಿಟಿಐ)
ಸಾಂದರ್ಭಿಕ ಚಿತ್ರ (ಪಿಟಿಐ)   

ಡೆಹ್ರಾಡೂನ್: ಭಾರಿ ಮಳೆಯಿಂದಾಗಿ ಉತ್ತರಾಖಂಡದ ಚಂಪಾವತ್‌ನ ತಾನಕ್‌ಪುರ್‌ ಘಾಟ್ ರಾಷ್ಟ್ರೀಯ ಹೆದ್ದಾರಿ ಬಳಿ ಹಲವೆಡೆ ಭೂಕುಸಿತ ಸಂಭವಿಸಿದ್ದು, ಸುಮಾರು 150 ಮಂದಿ ತೊಂದರೆಗೆ ಸಿಲುಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಶ್ರಮ್‌ ಘಾಟ್ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ ವರೆಗೂ ವಾಹನ ದಟ್ಟಣೆ ಇತ್ತು. ರಸ್ತೆ ಮಧ್ಯೆ ಸಿಕ್ಕಿಹಾಕಿಕೊಂಡಿರುವವರ ರಕ್ಷಣೆಗೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿ ಮನೋಜ್ ಪಾಂಡೆ ತಿಳಿಸಿದ್ದಾರೆ.

ಹೆದ್ದಾರಿಯ ಎಂಟು ಕಡೆಗಳಲ್ಲಿ ಭೂಕುಸಿತ ಸಂಭವಿಸಿದೆ. ಏಳು ಕಡೆಗಳಲ್ಲಿ ರಸ್ತೆ ಮೇಲೆ ಬಿದ್ದಿರುವ ಮಣ್ಣು, ಬಂಡೆಗಳನ್ನು ಮಂಗಳವಾರ ಸಂಜೆಯೇ ತೆರವುಗೊಳಿಸಲಾಗಿದೆ. ಮಂಗಳವಾರ ಮಧ್ಯರಾತ್ರಿವರೆಗಿನ ಎಲ್ಲ ಪ್ರಯತ್ನಗಳ ಹೊರತಾಗಿಯೂ ವಿಶ್ರಮ್‌ ಘಾಟ್ ಪ್ರದೇಶದಲ್ಲಿ ಬಂಡೆಗಳು ಮತ್ತು ಅವಶೇಷಗಳನ್ನು ತೆರವುಗೊಳಿಸಲು ಸಾಧ್ಯವಾಗಿಲ್ಲ. ಬುಧವಾರ ಬೆಳಿಗ್ಗೆ ಮತ್ತೆ ತೆರವು ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಭೂಕುಸಿತದಿಂದಾಗಿ ರಸ್ತೆ ಮಧ್ಯೆ ಸಿಕ್ಕಿಹಾಕಿಕೊಂಡಿರುವವರ ಪೈಕಿ ಕೆಲವರು ಹಲ್‌ದ್ವಾನಿ ಪ್ರದೇಶಕ್ಕೆ ಸೇರಿದವರಾಗಿದ್ದು, ಇವರನ್ನು ದೇವಿಧುರಾಕ್ಕೆ ಕಳುಹಿಸಿಕೊಡಲಾಗಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.