ಉತ್ತರಾಖಂಡದಲ್ಲಿ ಭಾರಿ ಮಳೆ
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಹಲವು ಭಾಗಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ರಾಜ್ಯ ಹಲವೆಡೆ ಹವಾಮಾನ ಇಲಾಖೆ ಇಂದು (ಭಾನುವಾರ) ‘ರೆಡ್ ಅಲರ್ಟ್’ ಘೋಷಿಸಿದೆ.
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಚಾರ್ಧಾಮ್ ಯಾತ್ರೆಯನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹರಿದ್ವಾರ, ಋಷಿಕೇಶ, ಶ್ರೀನಗರ, ರುದ್ರಪ್ರಯಾಗ, ಸೋನ್ಪ್ರಯಾಗ ಮತ್ತು ವಿಕಾಸನಗರದಲ್ಲಿ ಯಾತ್ರಾರ್ಥಿಗಳನ್ನು ತಡೆಯಲು ಪೊಲೀಸರು ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗರ್ವಾಲ್ ವಿಭಾಗದ ಪೊಲೀಸ್ ಆಯುಕ್ತ ವಿನಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.
ಮಾರ್ಗ ಮಧ್ಯದಲ್ಲಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಯಾತ್ರಾರ್ಥಿಗಳಿಗೆ ಸೂಚನೆ ನೀಡಲಾಗಿದ್ದು, ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಉತ್ತರಾಖಂಡದ ಬಾಲಿಗಢದ ಬಾರ್ಕೋಟ್-ಯಮುನೋತ್ರಿ ರಸ್ತೆಯಲ್ಲಿ ಮೇಘಸ್ಫೋಟ ಸಂಭವಿಸಿದೆ. ಇದರಿಂದಾಗಿ ಹಠಾತ್ ಪ್ರವಾಹ ಉಂಟಾಗಿ ನಿರ್ಮಾಣ ಹಂತದ ಹೋಟೆಲ್ನಲ್ಲಿದ್ದ ಒಂಬತ್ತು ಕಾರ್ಮಿಕರು ನಾಪತ್ತೆಯಾಗಿದ್ದಾರೆ. ಎನ್ಡಿಆರ್ಎಫ್, ಎಸ್ಡಿಆರ್ಎಫ್ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ಉತ್ತರಕಾಶಿ ಜಿಲ್ಲಾಧಿಕಾರಿ ಪ್ರಶಾಂತ್ ಆರ್ಯ ತಿಳಿಸಿದ್ದಾರೆ.
ಬದರಿನಾಥ, ಕೇದಾರನಾಥ, ಗಂಗೋತ್ರಿ, ಯಮುನೋತ್ರಿ ಮತ್ತು ಚಾರ್ಧಾಮ್ ಪವಿತ್ರ ಸ್ಥಳಗಳಿಗೆ ಪ್ರತಿ ವರ್ಷ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.