ADVERTISEMENT

ಇತರ ದೇಶಗಳ ಹಸ್ತಕ್ಷೇಪಕ್ಕೆ ಕಾರಣವಾಗಬಹುದು: ವೈಕೊ ಆತಂಕ

ಜಮ್ಮು ಮತ್ತು ಕಾಶ್ಮೀರ ವಿಶೇಷಾಧಿಕಾರ ರದ್ದತಿ ಪ್ರಸ್ತಾವ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2019, 8:02 IST
Last Updated 5 ಆಗಸ್ಟ್ 2019, 8:02 IST
   

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನ ಹಿಂಪಡೆಯುವ ಕೇಂದ್ರ ಸರ್ಕಾರದ ಈ ಕ್ರಮ ಆಕ್ಷೇಪಾರ್ಹ. ನಾನು ಈ ಪ್ರಸ್ತಾವವನ್ನು ಸಂಪೂರ್ಣವಾಗಿ ವಿರೋಧಿಸುತ್ತೇನೆ ಎಂದು ಎಂಡಿಎಂಕೆ ನಾಯಕ ವೈಕೊ ಹೇಳಿದರು.

ರಾಜ್ಯಸಭೆಯಲ್ಲಿ ಕಾಶ್ಮೀರ ಕುರಿತು ಗೃಹ ಸಚಿವ ಅಮಿತ್‌ ಶಾ ಮಂಡಿಸಿರುವ ಪ್ರಸ್ತಾವದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಈ ಕ್ರಮದಿಂದ ಕಾಶ್ಮೀರ ಸಮಸ್ಯೆ ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪಕ್ಕೆ ಬರುವ ಮತ್ತು ಇತರ ದೇಶಗಳು ಹಸ್ತಕ್ಷೇಪ ಮಾಡುವ ಸಾಧ್ಯತೆಗಳು ಹೆಚ್ಚಾಗಿವೆ ಎಂದರು.

ಕಾಶ್ಮೀರವು ಮತ್ತೊಂದು ಸುಡಾನ್, ಕೊಸಾವೊ ಅಥವಾ ಪೂರ್ವ ತೈಮೂರ್ ಆಗುವುದು ನನಗೆ ಇಷ್ಟವಿಲ್ಲ. ದುರಂತವೆಂದರೆ ಕೇಂದ್ರದ ಈ ನಿರ್ಧಾರ ಇಂಥ ಎಲ್ಲ ಆತಂಕಗಳನ್ನು ನಿಚ್ಚಳವಾಗಿ ಕಾಣಿಸುವಂತೆ ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಭಾರತದ ವಿರುದ್ಧ ನಿಂತಿರುವ ಚೀನಾ ಮತ್ತು ಪಾಕಿಸ್ತಾನಗಳು ಜಾಗತಿಕ ವೇದಿಕೆಗಳಲ್ಲಿ ಕಾಶ್ಮೀರದ ವಿಷಯ ಪ್ರಸ್ತಾಪಿಸುವ ಮೂಲಕ ಭಾರತದ ಮೇಲೆ ಮೇಲುಗೈ ಸಾಧಿಸಲು ಸಿಕ್ಕಿರುವ ಈ ಅವಕಾಶ ಬಿಡುವುದಿಲ್ಲ. ಸ್ವಾತಂತ್ರ್ಯದ ನಂತರ ಕಾಶ್ಮೀರದಲ್ಲಿ ರಾಜ್ಯ ಸರ್ಕಾರಗಳು ನೆಮ್ಮದಿಯಿಂದ ಆಡಳಿತ ನಡೆಸಲು ಕಾಂಗ್ರೆಸ್ ಅವಕಾಶ ನೀಡಿದ್ದರೆ ಕಾಶ್ಮೀರಕ್ಕೆ ಇಂಥ ಸ್ಥಿತಿ ಬರುತ್ತಿರಲಿಲ್ಲ ಎಂದರು.

ಕಾಶ್ಮೀರದ ಅನನ್ಯತೆ ಕಾಪಾಡಿಕೊಳ್ಳಲು ಅವಕಾಶ ಕೊಡುತ್ತೇವೆ ಎಂದು ಹೇಳಿ ಭಾರತ ಕಾಶ್ಮೀರವನ್ನು ತನ್ನೊಂದಿಗೆ ಸೇರಿಸಿಕೊಂಡಿತ್ತು. ಆದರೆ ಇಂದು ಆ ಮಾತಿನಿಂದ ದೂರ ಸರಿಯಿತು. ಇಂದು ಈ ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಕಗ್ಗೊಲೆ ನಡೆದ ದಿನ. ಈ ಪ್ರಸ್ತಾವವನ್ನುನಾನು ಸಂಪೂರ್ಣವಾಗಿ ವಿರೋಧಿಸುತ್ತೇನೆ ಎಂದು ತಮ್ಮ ನಿಲುವನ್ನು ಸ್ಪಷ್ಡಪಡಿಸಿದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.