ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿರುವ ವೈಷ್ಣೋದೇವಿ ದೇವಸ್ಥಾನಕ್ಕೆ ತೆರಳುವ ಹಳೆಯ ಮಾರ್ಗದಲ್ಲಿ ಭೂಕುಸಿತದಿಂದ ಕುಸಿದ ಕಚೇರಿಯ ಅವಶೇಷಗಳನ್ನು ತೆರವುಗೊಳಿಸಲಾಯಿತು
–ಪಿಟಿಐ ಚಿತ್ರ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದು, 10 ಮಂದಿ ಗಾಯಗೊಂಡಿದ್ದಾರೆ.
ಭಾರಿ ಮಳೆ ಸುರಿದಿದ್ದರಿಂದ ಬಂಗಾಂಗಾ ಸಮೀಪದ ಗುಲ್ಶನ್ ಕಾ ಲಂಗರ್ನಲ್ಲಿ ಸೋಮವಾರ ಮುಂಜಾನೆ 8.30ರ ಸುಮಾರಿಗೆ ಭೂಕುಸಿತ ಸಂಭವಿಸಿದೆ.
ಇಲ್ಲಿನ ತ್ರಿಕೂಟ ಪರ್ವತಕ್ಕೆ ತೆರಳಲು ಯಾತ್ರಾರ್ಥಿಗಳು ನೋಂದಾಯಿಸಿಕೊಳ್ಳುತ್ತಿದ್ದ ಕಚೇರಿ ಕುಸಿದಿದೆ. ವೈಷ್ಣೋದೇವಿ ದೇವಸ್ಥಾನಕ್ಕೆ ತೆರಳುವ ಹಳೆಯ ಮಾರ್ಗದಲ್ಲಿ ಈ ಕಚೇರಿ ಇತ್ತು.
ಒಬ್ಬ ಯಾತ್ರಾರ್ಥಿ ಸಾವಿಗೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇತರ ಏಳು ಮಂದಿಗೆ ಸಣ್ಣ ಗಾಯಗಳಾಗಿವೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಭೂಕುಸಿತ ಸಂಭವಿಸಿದ ಬಳಿಕ ಮುನ್ನೆಚ್ಚರಿಕೆ ಕ್ರಮವಾಗಿ ವೈಷ್ಣೋದೇವಿ ದೇವಸ್ಥಾನದಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಪ್ರವೇಶವನ್ನು ಸ್ಥಗಿತಗೊಳಿಸಲಾಗಿತ್ತು ಎಂದು ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ.
ಇಲ್ಲಿಯ ಕತ್ರಾ ಪಟ್ಟಣದಲ್ಲಿ ಸೋಮವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ಗಂಟೆಗಳಲ್ಲಿ 184.2 ಮಿ.ಮೀ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.