ADVERTISEMENT

ಉತ್ತರ ಪ್ರದೇಶ: ಕಂದಕಕ್ಕೆ ವಾಹನ ಉರುಳಿ 10 ಯಾತ್ರಾರ್ಥಿಗಳು ಸಾವು

​ಪ್ರಜಾವಾಣಿ ವಾರ್ತೆ
Published 23 ಜೂನ್ 2022, 7:16 IST
Last Updated 23 ಜೂನ್ 2022, 7:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಪಿಲಿಭಿತ್:ಉತ್ತರ ಪ್ರದೇಶದ ಗಜ್‌ರೌಲಾ ಪ್ರದೇಶದಲ್ಲಿ ವಾಹನ ಪಲ್ಟಿಯಾಗಿ ರಸ್ತೆ ಪಕ್ಕದ ಕಂದಕಕ್ಕೆ ಉರುಳಿ ಬಿದ್ದು ಇಬ್ಬರು ಮಕ್ಕಳು ಸೇರಿದಂತೆ 10 ಯಾತ್ರಾರ್ಥಿಗಳು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಹರಿದ್ವಾರದಿಂದ 17 ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ವಾಹನವು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಕಡೆಗೆ ಸಾಗುತ್ತಿದ್ದಾಗ ಲಖನೌ ಹೆದ್ದಾರಿಯಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ.

ಚಾಲಕ ನಿದ್ರೆಯ ಮಂಪರಿನಲ್ಲಿ ಇದ್ದುದೇ ಅಪಘಾತಕ್ಕೆ ಕಾರಣವಾಗಿದ್ದು, ಇದರಿಂದಾಗಿ ವಾಹನದ ನಿಯಂತ್ರಣ ಕಳೆದುಕೊಂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಗೆ ಸಂತಾಪ ಸೂಚಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ಪೊಲೀಸರ ಪ್ರಕಾರ, ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.

ವಾಹನದಲ್ಲಿ 17 ಜನರು ಪ್ರಯಾಣಿಸುತ್ತಿದ್ದರು. ಮೃತರಲ್ಲಿ ಮೂವರು ಮಕ್ಕಳು, ಮೂವರು ಮಹಿಳೆಯರು ಮತ್ತು ಚಾಲಕ ಸಹಿತ ನಾಲ್ವರು ಪುರುಷರು ಸೇರಿದ್ದಾರೆ ಎಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ (ಎಆರ್‌ಟಿಒ) ಅಮಿತಾಭ್ ರಾಯಿ ತಿಳಿಸಿದ್ದಾರೆ.

ಮೃತರನ್ನು ಲಕ್ಷ್ಮಿ (28), ರಚನಾ (28), ಸರಳಾ ದೇವಿ (60), ಹರ್ಷ್ (16), ಖುಷಿ (2), ಸುಶಾಂತ್ (14), ಆನಂದ್ (3), ಲಾಲ್‌ಮನ್ (65), ಶ್ಯಾಮಸುಂದರ್ (55) ಮತ್ತು ಚಾಲಕ ದಿಲ್ಶಾದ್ (35) ಎಂದು ಗುರುತಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.