ಮುಂಬೈ: ಹಣ ದುರ್ಬಳಕೆ ಪ್ರಕರಣವೊಂದರಲ್ಲಿ ಬಿಜೆಪಿ ಮುಖಂಡ ಕಿರೀಟ್ ಸೋಮೈಯ ಅವರನ್ನು ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಿ ಬಾಂಬೆ ಹೈಕೋರ್ಟ್ ಬುಧವಾರ ಆದೇಶಿಸಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನುಜಾ ಪ್ರಭುದೇಸಾಯಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಒಂದು ವೇಳೆ ಸೋಮೈಯ ಅವರನ್ನು ಬಂಧಿಸಿದಲ್ಲಿ, ₹ 50,000 ವೈಯಕ್ತಿಕ ಬಾಂಡ್ ಮೇಲೆ ಅವರನ್ನು ಬಿಡುಗಡೆ ಮಾಡಬೇಕು ಎಂದು ಆದೇಶಿಸಿದರು.
‘ಪ್ರಕರಣ ಕುರಿತ ತನಿಖೆಗೆ ಸಹಕರಿಸಬೇಕು. ಏ. 18ರಿಂದ ನಾಲ್ಕು ದಿನಗಳ ಕಾಲ ತನಿಖಾಧಿಕಾರಿ ಮುಂದೆ ಹಾಜರಾಗಬೇಕು’ ಎಂದು ಸೋಮೈಯ ಅವರಿಗೆ ನಿರ್ದೇಶನ ನೀಡಿದ ನ್ಯಾಯಮೂರ್ತಿಗಳು, ವಿಚಾರಣೆಯನ್ನು ಏ.28ಕ್ಕೆ ಮುಂದೂಡಿದರು.
‘ಕಾರ್ಯಾಚರಣೆಯಿಂದ ಸ್ಥಗಿತಗೊಂಡಿದ್ದ ನೌಕಾಪಡೆಯ ವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಾಂತ್ ಅನ್ನು ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸುವ ಸಲುವಾಗಿ ಕಿರೀಟ್ ಸೋಮೈಯ ಅವರು ₹ 57 ಕೋಟಿಸಂಗ್ರಹಿಸಿದ್ದರು. ಈ ಹಣವನ್ನು ಅವರು ದುರುಪಯೋಗಪಡಿಸಿಕೊಂಡಿದ್ದಾರೆ’ ಎಂದು ಸೇನೆಯ ಮಾಜಿ ಅಧಿಕಾರಿಯೊಬ್ಬರು ಟ್ರಾಂಬೆ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 6ರಂದು ದೂರು ದಾಖಲಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.