ಲಖನೌ: ಉತ್ತರಪ್ರದೇಶದ ಆಲಿಘರ್ನ ಗ್ರಾಮವೊಂದರ ಬಳಿಯಿರುವ ಅರಣ್ಯ ಪ್ರದೇಶದಲ್ಲಿ ದಲಿತ ಬಾಲಕಿಯ ಶವ ಪತ್ತೆಯಾಗಿದೆ.
‘ಹತ್ಯೆಗೂ ಮುನ್ನ ಬಾಲಕಿಯ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ಕುಟುಂಬದವರು ದೂರಿದ್ದಾರೆ. ಆದರೆ ಬಾಲಕಿಯ ಮರಣೋತ್ತರ ಪರೀಕ್ಷೆಯ ವರದಿ ಇನ್ನೂ ಬಂದಿಲ್ಲ. ಹಾಗಾಗಿ ಆಕೆಯ ಮೇಲೆ ಅತ್ಯಾಚಾರವೆಸಗಲಾಗಿದೆಯೇ ಎಂಬುದನ್ನು ಹೇಳಲು ಸಾಧ್ಯವಿಲ್ಲ’ ಎಂದು ಪೊಲೀಸರು ತಿಳಿಸಿದರು.
‘ಬಾಲಕಿ ಅಕ್ರಾಬಾದ್ ಪ್ರದೇಶದಲ್ಲಿ ವಾಸವಾಗಿದ್ದಳು. ಭಾನುವಾರ ಸಂಜೆ ಹಸುವಿಗೆ ಮೇವು ತರಲು ಹತ್ತಿರವಿದ್ದ ಅರಣ್ಯ ಪ್ರದೇಶಕ್ಕೆ ಹೋಗಿದ್ದ ಬಾಲಕಿ ಮನೆಗೆ ವಾಪಸ್ ಬಂದಿರಲಿಲ್ಲ. ಕುಟುಂಬಸ್ಥರು ಬಾಲಕಿಯ ಹುಡುಕಾಟ ನಡೆಸುವಾಗ ಆಕೆಯ ಶವ ಗ್ರಾಮದಿಂದ ಸ್ವಲ್ಪ ದೂರದಲ್ಲಿ ಪತ್ತೆಯಾಗಿದೆ’ ಎಂದು ಮೂಲಗಳು ಹೇಳಿವೆ.
‘ಬಾಲಕಿಯ ಶವ ಪತ್ತೆಯಾಗಿದ್ದಾಗ ಆಕೆಯ ಬಟ್ಟೆಗಳು ಹರಿದಿದ್ದವು. ಅವಳ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ಸಾಕ್ಷಿಗಳು ಹೇಳಿವೆ. ಪ್ರಾಥಮಿಕ ವರದಿಯಲ್ಲಿ ಬಾಲಕಿಯನ್ನು ಕತ್ತು ಹಿಸುಕಿ ಸಾಯಿಸಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ತನಿಖೆ ನಡೆಸಲು ಐದು ತಂಡಗಳನ್ನು ರಚಿಸಲಾಗಿದೆ’ ಎಂದು ಹಿರಿಯ ಜಿಲ್ಲಾ ಪೊಲೀಸ್ ಅಧಿಕಾರಿ ತಿಳಿಸಿದರು.
‘ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗ ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ಘರ್ಷಣೆ ಸಂಭವಿಸಿದೆ. ಈ ವೇಳೆ ಗ್ರಾಮಸ್ಥರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಲ್ಲಿ ಹಲವು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಪೊಲೀಸ್ ವಾಹನಕ್ಕೆ ಕೂಡ ಹಾನಿಯಾಗಿದೆ’ ಎಂದು ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.