ADVERTISEMENT

ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ವಿಶ್ವಭಾರತಿ ಮನವಿ

ಪಿಟಿಐ
Published 18 ಆಗಸ್ಟ್ 2020, 21:23 IST
Last Updated 18 ಆಗಸ್ಟ್ 2020, 21:23 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ಬೋಲಾಪುರ, ಪಶ್ಚಿಮ ಬಂಗಾಳ: ವಿಶ್ವವಿದ್ಯಾಲಯದ ಆವರಣದಲ್ಲಿ ಕೇಂದ್ರೀಯ ಭದ್ರತಾ ಪಡೆಗಳನ್ನು ನಿಯೋಜಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲು ವಿಶ್ವ ಭಾರತಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಮಂಗಳವಾರ ನಿರ್ಧರಿಸಿದೆ.

ರವೀಂದ್ರನಾಥ ಟ್ಯಾಗೋರ್‌‌ ಸ್ಥಾಪಿಸಿದ್ದವಿಶ್ವ ಭಾರತಿಯು ಕೇಂದ್ರೀಯ ವಿಶ್ವವಿದ್ಯಾಲಯವಾಗಿದೆ. ಪ್ರಧಾನಿ ಹುದ್ದೆಯಲ್ಲಿರುವವರು ಇದರ ಕುಲಪತಿಗಳಾಗಿರುತ್ತಾರೆ.

ವಿಶ್ವವಿದ್ಯಾಲಯದ ಮೈದಾನದಲ್ಲಿ ಪ್ರತಿ ವರ್ಷವೂ ಚಳಿಗಾಲದ ಅವಧಿಯಲ್ಲಿ ಪೌಶ್‌ ಮೇಳ ಆಯೋಜಿಸಲಾಗುತ್ತದೆ. ಈ ಬಾರಿ ಮೇಳ ರದ್ದು ಮಾಡುವುದಾಗಿ ತಿಳಿಸಿದ್ದ ವಿಶ್ವವಿದ್ಯಾಲಯದ ಆಡಳಿತ ಮಂಡಳಿ, ಮೈದಾನದ ಸುತ್ತಲೂ ತಡೆಗೋಡೆ ನಿರ್ಮಿಸಲು ಮುಂದಾಗಿತ್ತು. ಇದರಿಂದ ಕೆರಳಿದ ಸುಮಾರು 4,000 ಮಂದಿಯನ್ನೊಳಗೊಂಡ ಸ್ಥಳೀಯರ ಗುಂಪು ಸೋಮವಾರ ವಿಶ್ವವಿದ್ಯಾಲಯದ ಆವರಣದೊಳಗೆ ನುಗ್ಗಿ ಗಲಭೆ ನಡೆಸಿತ್ತು. ‘ಪ್ರಧಾನಿ ಅವರು ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳಾಗಿದ್ದಾರೆ. ಹೀಗಾಗಿ ಅವರ ಮಧ್ಯ ಪ್ರವೇಶಕ್ಕೆ ಮನವಿ ಮಾಡಬೇಕೆಂದು ಕಾರ್ಯಕಾರಿ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ’ ಎಂದು ಸದಸ್ಯರೊಬ್ಬರು ಮಂಗಳವಾರ ಹೇಳಿದ್ದಾರೆ.

ADVERTISEMENT

ಘಟನೆಗೆ ಸಂಬಂಧಿಸಿದಂತೆ ಒಟ್ಟು ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಬಿರ್ಭುಮ್‌ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ಶ್ಯಾಮ್‌ ಸಿಂಗ್‌ ತಿಳಿಸಿದ್ದಾರೆ.

‘ಪರಿಸ್ಥಿತಿ ಶಾಂತವಾಗುವವರೆಗೂ ವಿಶ್ವವಿದ್ಯಾಲಯದಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸದಿರಲು ತೀರ್ಮಾನಿಸಲಾಗಿದೆ. ಇದರಿಂದ ಪ್ರವೇಶ ಪ್ರಕ್ರಿಯೆ, ಪರೀಕ್ಷೆ ಹಾಗೂ ತುರ್ತು ಕಾರ್ಯಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ’ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.