ಕೊಲ್ಲಂ, ಕೇರಳ: ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಎಸ್.ಕಿರಣ್ ಕುಮಾರ್ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಸಾಬೀತಾಗಿದ್ದು, ಆತನಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಕೇರಳದ ನ್ಯಾಯಾಲಯ ಮಂಗಳವಾರ ಆದೇಶ ನೀಡಿದೆ.
ಕಳೆದ ವರ್ಷ ಜೂನ್ನಲ್ಲಿ ಪತಿಯ ಮನೆಯಲ್ಲಿ ವಿಸ್ಮಯಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ-1 ಸುಜಿತ್ ಕೆ.ಎನ್. ಅವರು ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ 10 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ ಎಂದು ವಿಶೇಷ ಸರ್ಕಾರಿ ಅಭಿಯೋಜಕ (ಎಸ್ಪಿಪಿ) ಜಿ.ಮೋಹನರಾಜ್ ತಿಳಿಸಿದರು.
ಅಪರಾಧಿ ಕುಮಾರ್ಗೆ ಒಟ್ಟು ₹ 12,55,000 ದಂಡವನ್ನೂ ವಿಧಿಸಲಾಗಿದ್ದು, ಅದರಲ್ಲಿ ₹ 2 ಲಕ್ಷ ಸಂತ್ರಸ್ತೆಯ ಪೋಷಕರಿಗೆ ಪಾವತಿಸಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.
‘ಅಪರಾಧಿಗೆ ಜೀವಾವಧಿ ಶಿಕ್ಷೆ ಸಿಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಈ ಆದೇಶದಿಂದ ಸಂತೋಷವಾಗಿಲ್ಲ. ಶಿಕ್ಷೆಯ ಆದೇಶದ ವಿರುದ್ಧ ಕುಟುಂಬವು ಮೇಲ್ಮನವಿ ಸಲ್ಲಿಸಲಿದೆ. ಮಗಳಿಗೆ ನ್ಯಾಯ ಸಿಕ್ಕಿದೆ ಎಂದು ನಂಬುವುದಿಲ್ಲ. ವಿಸ್ಮಯಾಳ ಆತ್ಮಹತ್ಯೆಗೆ ಕಾರಣರಾದ ಇತರರ ವಿರುದ್ಧ ಕ್ರಮಕ್ಕಾಗಿ ಪ್ರಯತ್ನವನ್ನು ಮುಂದುವರಿಸಲಾಗುವುದು’ ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.