ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಲ್ಲಿ ನಡೆದ ಹಿಂಸಾಚಾರದಲ್ಲಿ ದುಷ್ಕರ್ಮಿಗಳು ವಾಹನಕ್ಕೆ ಬೆಂಕಿ ಹಚ್ಚಿದರು
ಪಿಟಿಐ ಚಿತ್ರ
ಕೋಲ್ಕತ್ತ: ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದ್ದು ಎನ್ನಲಾದ ಹಿಂಸಾಚಾರದಲ್ಲಿ ಮೂವರು ಮೃತಪಟ್ಟಿದ್ದಾರೆ.
ಶಂಷೇರ್ಗಂಜ್ ಪ್ರದೇಶದ ಜಾಫರಾಬಾದ್ನ ಮನೆಯೊಂದರಲ್ಲಿ ತಂದೆ ಹಾಗೂ ಮಗನ ಮೃತದೇಹ ಪತ್ತೆಯಾಗಿದೆ. ಅವರನ್ನು ಹರಗೋವಿಂದೊ ದಾಸ್ ಮತ್ತು ಚಂದನ್ ಎಂದು ಗುರುತಿಸಲಾಗಿದೆ. ಇಬ್ಬರ ದೇಹದಲ್ಲೂ ಇರಿತದ ಗಾಯಗಳು ಇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
‘ಹಲ್ಲೆಕೋರರು ಮನೆಯನ್ನು ಹೊಕ್ಕು ತಂದೆ ಹಾಗೂ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಮನೆಯನ್ನು ಲೂಟಿ ಮಾಡಿದ್ದಾರೆ. ಹಲ್ಲೆಗೊಳಗಾದ ಈ ಇಬ್ಬರ ದೇಹ ಮನೆಯೊಳಗೆ ಪತ್ತೆಯಾಯಿತು. ನಂತರ ಆಸ್ಪತ್ರೆಗೆ ಸಾಗಿಸಲಾಯಿತು. ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು’ ಎಂದಿದ್ದಾರೆ.
‘ತಂದೆ ಮತ್ತು ಮಗ ತಮ್ಮ ಮನೆಯೊಳಗೆ ಬಿದ್ದಿದ್ದರು. ಸಮೀಪದ ಆಸ್ಪತ್ರೆಗೆ ಸಾಗಿಸಿದಾಗ ಇಬ್ಬರೂ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು’ ಎಂದು ಪೊಲೀಸರು ಹೇಳಿದ್ದಾರೆ. ‘ಮನೆಯನ್ನು ಲೂಟಿ ಮಾಡಿರುವ ದುಷ್ಕರ್ಮಿಗಳು ಪರಾರಿಯಾಗುವಾಗ ಇಬ್ಬರಿಗೂ ಇರಿದಿದ್ದಾರೆ’ ಎಂದು ಅವರ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.
‘ಘಟನೆ ಬಗ್ಗೆ ತನಿಖೆ ಕೈಗೆತ್ತಿಕೊಳ್ಳಲಾಗಿದ್ದು, ಹತ್ಯೆಯಲ್ಲಿ ಭಾಗಿಯಾಗಿದವರನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ. ಸಂತ್ರಸ್ತರ ಕುಟುಂಬದ ಇತರ ಸದಸ್ಯರು ಮತ್ತು ಸ್ಥಳೀಯ ನಿವಾಸಿಗಳಿಂದ ಮಾಹಿತಿ ಕಲೆಹಾಕಿದ್ದೇವೆ’ ಎಂದು ಪೊಲೀಸರು ಹೇಳಿದ್ದಾರೆ.
ಇಬ್ಬರಿಗೆ ಗುಂಡೇಟು: ಪ್ರತ್ಯೇಕ ಪ್ರಕರಣವೊಂದರಲ್ಲಿ, ಶಂಷೇರ್ಗಂಜ್ನ ಧುಲಿಯಾನ್ನಲ್ಲಿ ಇಬ್ಬರು ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಗುಲಾಮ್ ಮೊಯಿನುದ್ದೀನ್ ಶೇಖ್ ಮತ್ತು ಇನ್ನೊಬ್ಬ ಬಾಲಕನಿಗೆ ಗುಂಡು ತಗುಲಿದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ. ‘ಮುರ್ಶಿದಾಬಾದ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಬ್ಬರೂ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ’ ಎಂದಿದೆ.
‘ಮುರ್ಶಿದಾಬಾದ್ ಜಿಲ್ಲೆಯ ವಿವಿಧೆಡೆ ಶುಕ್ರವಾರ ನಡೆದ ಹಿಂಸಾಚಾರದಲ್ಲಿ 15 ಪೊಲೀಸರು ಗಾಯಗೊಂಡಿದ್ದಾರೆ. ಇದುವರೆಗೆ 118 ಮಂದಿಯನ್ನು ಬಂಧಿಸಲಾಗಿದೆ’ ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಜಾವೇದ್ ಶಮೀಮ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.