
ಪ್ರಜಾವಾಣಿ ಸಂಗ್ರಹ ಚಿತ್ರ
ಇಂದೋರ್: ಮಧ್ಯಪ್ರದೇಶದ ಇಂದೋರ್ನಲ್ಲಿ ಅತಿಸಾರ ಮತ್ತು ವಾಂತಿಯಿಂದ ಹಲವರು ಮೃತಪಟ್ಟದ್ದಕ್ಕೆ ಕಲುಷಿತ ನೀರಿನ ಸೇವನೆಯೇ ಕಾರಣ ಎಂಬುದು ಪ್ರಯೋಗಾಲಯ ಪರೀಕ್ಷೆಯಿಂದ ಖಚಿತವಾಗಿದೆ.
ಮಧ್ಯಪ್ರದೇಶದ ವಾಣಿಜ್ಯ ರಾಜಧಾನಿ ಇಂದೋರ್, ಕಳೆದ ಎಂಟು ವರ್ಷಗಳಿಂದ ಭಾರತದ ಅತ್ಯಂತ ಸ್ವಚ್ಛ ನಗರ ಎನಿಸಿದ್ದರೂ, ಹಲವು ಪ್ರದೇಶಗಳಲ್ಲಿ ಕಲುಷಿತ ನೀರು ಸರಬರಾಜಾಗುತ್ತಿದೆ ಎಂಬುದು ಈ ವರದಿಯಿಂದ ಬಹಿರಂಗವಾಗಿದೆ.
'ಭಗೀರಥಪುರ ಪ್ರದೇಶದಲ್ಲಿ ಪೈಪ್ಲೈನ್ನಲ್ಲಿ ಸೋರಿಕೆಯಿಂದಾಗಿ ಕುಡಿಯುವ ನೀರು ಕಲುಷಿತಗೊಂಡಿತ್ತು. ಆ ನಂತರ ಸೋಂಕು ಹರಡಿತ್ತು ಎಂಬುದು ನಗರದ ವೈದ್ಯಕೀಯ ಕಾಲೇಜಿನ ಪ್ರಯೋಗಾಲಯದಲ್ಲಿ ನಡೆಸಿದ ಪರೀಕ್ಷೆ ವೇಳೆ ಖಚಿತವಾಗಿದೆ' ಎಂದು ಇಂದೋರ್ನ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ (ಸಿಎಮ್ಎಚ್ಒ) ಡಾ. ಮಾಧವ್ ಪ್ರಸಾದ್ ಹಸಾನಿ ಗುರುವಾರ ಹೇಳಿದ್ದಾರೆ.
ಆದರೆ, ಪ್ರಯೋಗಾಲಯ ಪರೀಕ್ಷೆಗೆ ಸಂಬಂಧಿಸಿದ ಹೆಚ್ಚಿನ ವಿವರವನ್ನು ಹಂಚಿಕೊಂಡಿರಲಿಲ್ಲ.
ಭಗೀರಥಪುರದ ಪೊಲೀಸ್ ಹೊರಠಾಣೆ ಬಳಿ ಶೌಚಾಲಯ ನಿರ್ಮಿಸಿರುವ ಸ್ಥಳದಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಮುಖ್ಯ ಪೈಪ್ಲೈನ್ನಲ್ಲಿ ಸೋರಿಕೆ ಕಂಡುಬಂದಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.
'ಭಗೀರಥಪುರದಲ್ಲಿ ಬೇರೆ ಇನ್ನೆಲ್ಲಿಯಾದರೂ ಸೋರಿಕೆಯಾಗಿದೆಯೇ ಎಂಬುದನ್ನು ಪರಿಶೀಲಿಸುತ್ತಿದ್ದೇವೆ' ಎಂದು ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜಯ್ ದುಬೆ ತಿಳಿಸಿದ್ದಾರೆ.
ಕಲುಷಿತ ನೀರಿನ ಸೇವನೆಯಿಂದ ಈವರೆಗೆ 150ಕ್ಕೂ ಹೆಚ್ಚು ಜನರು ಆಸ್ಪತ್ರೆಗಳಿಗೆ ದಾಖಲಾಗಿದ್ದು, 10 ಮಂದಿ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.