ಪಿಟಿಐ
ಗುವಾಹಟಿ: ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ಕಲ್ಲಿದ್ದಲು ಗಣಿಯೊಳಗೆ ಸೋಮವಾರ ದಿಢೀರ್ ನೀರು ಚಿಮ್ಮಿದ ಪರಿಣಾಮ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಗಣಿಯೊಳಗೆ ಹಲವು ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದರು.
ಗಣಿಯೊಳಗೆ 15 ಕಾರ್ಮಿಕರಿದ್ದಾರೆ ಎಂದು ಉದ್ಯೋಗಿಗಳು ತಿಳಿಸಿದ್ದಾರೆ. ಆದರೆ ಅಧಿಕಾರಿಗಳನ್ನು ಇದನ್ನು ದೃಢಪಡಿಸಿಲ್ಲ.
‘ಕಾರ್ಮಿಕರು ಗಣಿಯೊಳಗೆ ಸಿಲುಕಿರುವ ಸುದ್ದಿ ತಿಳಿದು ನೋವಾಗಿದೆ. ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಹೋದ್ಯೋಗಿ ಕೌಶಿಕ್ ರಾಯ್ ಅವರು ಸ್ಥಳಕ್ಕೆ ದೌಡಾಯಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಗಾಗಿ ಸೇನೆಯ ನೆರವು ಕೇಳಲಾಗಿದೆ. ಎಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ‘ಎಕ್ಸ್’ನಲ್ಲಿ ಹೇಳಿದ್ದಾರೆ.
ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆಗಳು ಘಟನಾ ಸ್ಥಳದತ್ತ ಧಾವಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.
ಅನಿರೀಕ್ಷಿತವಾಗಿ ಏಕಾಏಕಿ ಪ್ರವಾಹ ಸ್ಥಿತಿ ನಿರ್ಮಾಣವಾಯಿತು, ಕಾರ್ಮಿಕರು ಹೊರಬರದಂತೆ ಆಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.