ADVERTISEMENT

ದೆಹಲಿ ಪೊಲೀಸರ ಧೈರ್ಯದ ಬಗ್ಗೆ ನಮಗೆ ಹೆಮ್ಮೆಯಿದೆ: ಅಮಿತ್ ಶಾ

ಪಿಟಿಐ
Published 28 ಜನವರಿ 2021, 10:23 IST
Last Updated 28 ಜನವರಿ 2021, 10:23 IST
ಗಾಯಗೊಂದ ದೆಹಲಿ ಪೊಲೀಸರ ಆರೋಗ್ಯ ವಿಚಾರಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ
ಗಾಯಗೊಂದ ದೆಹಲಿ ಪೊಲೀಸರ ಆರೋಗ್ಯ ವಿಚಾರಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ   

ನವದೆಹಲಿ: ಗಣರಾಜ್ಯೋತ್ಸವ ದಿನದಂದು ರಾಷ್ಟ್ರ ರಾಜಧಾನಿಯಲ್ಲಿ ನಡೆದ ರೈತರ ಟ್ರ್ಯಾಕ್ಟರ್ ಪೆರೇಡ್ ಸಂದರ್ಭದಲ್ಲಿ ಸಂಭವಿಸಿದ ಹಿಂಸಾಚಾರದಲ್ಲಿ ಗಾಯಗೊಂಡ ದೆಹಲಿ ಪೊಲೀಸರ ಆರೋಗ್ಯದ ಸ್ಥಿತಿ ವಿಚಾರಿಸುವ ಸಲುವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಗುರುವಾರ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿವಿಲ್ ಲೈನ್‌ನಲ್ಲಿರುವ ಶ್ರುಶುತ್ ಟ್ರಾಮಾ ಸೆಂಟರ್ ಹಾಗೂ ತೀರತ್ ರಾವ್ ಆಸ್ಪತ್ರೆಗಳಿಗೆ ಭೇಟಿ ನೀಡಿದ ಅಮಿತ್ ಶಾ, ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಪೊಲೀಸರ ಆರೋಗ್ಯ ವಿಚಾರಿಸಿದರು. ಬಳಿಕ ಪ್ರತಿಕ್ರಿಯಿಸಿದ ಅವರು, ಗಾಯಗೊಂಡ ದೆಹಲಿ ಪೊಲೀಸರ ಧೈರ್ಯ ಹಾಗೂ ಧೀರತೆಯ ಬಗ್ಗೆ ನಮಗೆ ಹೆಮ್ಮೆಯಿದೆ ಎಂದು ತಿಳಿಸಿದರು.

ಗಾಯಗೊಂಡ ಪೊಲೀಸರನ್ನು ಭೇಟಿಯಾದ ಅಮಿತ್ ಶಾ, ವೈದ್ಯರೊಂದಿಗೂ ಸಮಾಲೋಚನೆ ನಡೆಸಿದರು.

ADVERTISEMENT

ವಿವಾದಿತ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಗಣರಾಜ್ಯೋತ್ಸವ ದಿನದಂದು ರೈತರು ಹಮ್ಮಿಕೊಂಡಿದ್ದ ಟ್ರ್ಯಾಕ್ಟರ್ ಜಾಥಾದಲ್ಲಿ ಭಾರಿ ಹಿಂಸಾಚಾರ ನಡೆದಿತ್ತು.

ಹಿಂಸಾಚಾರದಲ್ಲಿ ಸುಮಾರು 400 ಪೊಲೀಸರು ಗಾಯಗೊಂಡಿದ್ದರು. ಇದರೊಂದಿಗೆ ನವೆಂಬರ್ 26ರಿಂದಲೇ ದೆಹಲಿ ಗಡಿ ಪ್ರದೇಶಗಳಲ್ಲಿ ಶಾಂತಿಯುತ ಹೋರಾಟ ನಡೆಸುತ್ತಿರುವ ರೈತರ ಪ್ರತಿಭಟನೆಯು ಟ್ರ್ಯಾಕ್ಟರ್ ರ‍್ಯಾಲಿಯಂದು ಹಿಂಸಾಚಾರಕ್ಕೆ ತಿರುಗಿತ್ತು.

ಈ ಸಂದರ್ಭದಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಮತ್ತು ದೆಹಲಿ ಪೊಲೀಸ್ ಆಯುಕ್ತ ಎಸ್.ಎನ್. ಶ್ರೀವಾಸ್ತವ ಜೊತೆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.