ಕೋಲ್ಕತ್ತ: ಈದ್ ಹಬ್ಬದ ಪ್ರಯುಕ್ತ ರಾಜ್ಯದ ಜನತೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಭಾಶಯ ಕೋರಿದ್ದಾರೆ.
ಕೋಲ್ಕತ್ತದಲ್ಲಿ ಈದ್ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 'ನಾವು ಒಗ್ಗಟ್ಟಾಗಿದ್ದರೆ ಯಾರಿಂದಲೂ ಏನು ಮಾಡಲು ಸಾಧ್ಯವಿಲ್ಲ' ಎಂದು ಹೇಳಿದರು.
'ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಮತ್ತು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನ್ನು ಒಪ್ಪಲು ಸಾಧ್ಯವಿಲ್ಲ' ಎಂದು ಅವರು ಪುನರುಚ್ಚರಿಸಿದರು.
'ಚುನಾವಣೆ ಸಂದರ್ಭದಲ್ಲಿ ಕೆಲವರು ಉದ್ದೇಶಪೂರ್ವಕವಾಗಿ ಗಲಭೆ ಎಬ್ಬಿಸಲು ಪ್ರಯತ್ನಿಸುತ್ತಾರೆ. ಈ ದುರುದ್ದೇಶಪೂರಿತ ಸಂಚಿಗೆ ಒಳಗಾಗಬಾರದು' ಎಂದು ಅವರು ಮನವಿ ಮಾಡಿದರು.
'ಇಂಡಿಯಾ' ಮೈತ್ರಿಯ ಕುರಿತು ಮಮತಾ ಪ್ರತಿಕ್ರಿಯೆ...
ವಿರೋಧ ಪಕ್ಷಗಳ 'ಇಂಡಿಯಾ' ಒಕ್ಕೂಟ ಜತೆಗಿನ ಮೈತ್ರಿಯ ಕುರಿತು ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು. ತೃಣಮೂಲ ಕಾಂಗ್ರೆಸ್ ಪಕ್ಷದ ಹೋರಾಟ ಬಿಜೆಪಿ ವಿರುದ್ಧವಾಗಿದೆ. ಬಂಗಾಳದಲ್ಲಿ ದಯವಿಟ್ಟು ಮತಗಳು ಬೇರೆ ಯಾವುದೇ ಪಕ್ಷಕ್ಕೆ ಹೋಗದಂತೆ ನೋಡಿಕೊಳ್ಳಿ ಎಂದು ಅವರು ಕರೆ ನೀಡಿದರು.
ವಿರೋಧ ಪಕ್ಷದ ನಾಯಕರ ವಿರುದ್ಧ ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.