ನವದೆಹಲಿ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪಕ್ಷವು ಕೃಷಿ ಕ್ಷೇತ್ರದ ವಿವಾದಾತ್ಮಕ ಕಾನೂನುಗಳನ್ನು ತೆಗೆದುಹಾಕುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಪಂಜಾಬ್ ರೈತರಿಗೆ ಭರವಸೆ ನೀಡಿದ್ದಾರೆ. ಕನಿಷ್ಠ ಬೆಂಬಲ ಬೆಲೆ, ಆಹಾರ ಸಂಗ್ರಹಣೆ ಮತ್ತು ಸಗಟು ಮಾರುಕಟ್ಟೆಗಳು ದೇಶದ 'ಮೂರು ಸ್ತಂಭ'ಗಳಾಗಿವೆ. 'ಪ್ರಧಾನಿ ನರೇಂದ್ರ ಮೋದಿ ಈ ವ್ಯವಸ್ಥೆಯನ್ನು ನಾಶಮಾಡಲು ಬಯಸುತ್ತಿದ್ದಾರೆ' ಎಂದು ಹೇಳಿದರು.
ಪಂಜಾಬ್ ರೈತರ ಮೂರು ದಿನಗಳ ಟ್ರ್ಯಾಕ್ಟರ್ ರ್ಯಾಲಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅವರ (ಬಿಜೆಪಿಯ) ಏಕೈಕ ಗುರಿ ಕನಿಷ್ಠ ಬೆಂಬಲ ಬೆಲೆ ಮತ್ತು ಆಹಾರ ಸಂಗ್ರಹವನ್ನು ನಾಶಪಡಿಸುವುದಾಗಿದೆ. ಇದನ್ನು ಸಾಧಿಸಲು ಈ ಸರ್ಕಾರಕ್ಕೆ ಕಾಂಗ್ರೆಸ್ ಎಂದಿಗೂ ಅವಕಾಶ ಮಾಡಿಕೊಡುವುದಿಲ್ಲ.
ಕಾಂಗ್ರೆಸ್ ಯಾವಾಗ ಅಧಿಕಾರಕ್ಕೆ ಬಂದರೂ ಕೂಡ ನಾವು ಈ ಕರಾಳ ಕಾನೂನುಗಳನ್ನು ತೆಗೆದುಹಾಕುತ್ತೇವೆ ಎಂದು ಈ ಮೂಲಕ ನಾನು ಖಾತರಿಪಡಿಸುತ್ತೇನೆ. ನಾವು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಹೋರಾಡುತ್ತೇವೆ ಮತ್ತು ಈ ಕರಾಳ ಕಾನೂನುಗಳನ್ನು ತೆಗೆದುಹಾಕುತ್ತೇವೆ ಎಂದರು.
ಪ್ರತಿಪಕ್ಷಗಳ ಉಗ್ರ ಪ್ರತಿಭಟನೆಗಳ ಮಧ್ಯೆಯೂ ಕಳೆದ ತಿಂಗಳು ಕೃಷಿಗೆ ಸಂಬಂಧಿಸಿದ ಮೂರು ಪ್ರಮುಖ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಈ ಕಾಯ್ದೆಗಳ ವಿರುದ್ಧ ಕಾಂಗ್ರೆಸ್ ವಿರೋಧವನ್ನು ವ್ಯಕ್ತಪಡಿಸುತ್ತಲೇ ಇದೆ. ತಮ್ಮ ಹಿತಾಸಕ್ತಿಗಾಗಿ ಕಾಂಗ್ರೆಸ್ ರೈತರನ್ನು ಎತ್ತಿಕಟ್ಟುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ, ರೈತರು (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಒಪ್ಪಂದ ಮಸೂದೆ ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆಗಳು 'ಐತಿಹಾಸಿಕ ಸುಧಾರಣೆಗಳು' ಎಂದು ಬಿಜೆಪಿಯು ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.