
ಸಾವು
(ಪ್ರಾತಿನಿಧಿಕ ಚಿತ್ರ)
ಕೋಲ್ಕತ್ತ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಯೊಬ್ಬರು (ಬಿಎಲ್ಒ) ಶಾಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣಾ ಕಾರ್ಯದ (ಎಸ್ಐಆರ್) ಒತ್ತಡವೇ ಅವರ ಆತ್ಮಹತ್ಯೆಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಹಮೀಮುಲ್ ಇಸ್ಲಾಂ (47) ಮೃತರು. ಅವರು ಬಾಲಕರ ಪ್ರಾಥಮಿಕ ಶಾಲೆ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಇದರ ಜೊತೆಗೆ ಬಿಎಲ್ಒ ಕರ್ತವ್ಯವನ್ನು ನಿಭಾಯಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ರಾಣಿತಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಶನಿವಾರ ಬೆಳಿಗ್ಗೆ ಶಾಲೆಗೆ ತೆರಳಿದ ಇಸ್ಲಾಂ, ಮಧ್ಯಾಹ್ನ ಮನೆಗೆ ಹಿಂತಿರುಗದ ಕಾರಣ ತೀವ್ರ ಹುಡುಕಾಟ ನಡೆಸಲಾಯಿತು. ಬಳಿಕ ಶಾಲೆಯ ಅವರಣದೊಳಗಿನ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಶನಿವಾರ ರಾತ್ರಿ ಪತ್ತೆಯಾಗಿದೆ.
ಈ ಎರಡೂ ಜವಾಬ್ದಾರಿಗಳಿಂದಾಗಿ ಹಮೀಮುಲ್ ಇಸ್ಲಾಂ ತೀವ್ರ ಒತ್ತಡಕ್ಕೆ ಒಳಗಾಗಿದ್ದರು. ಎಸ್ಐಆರ್ನಿಂದ ಹೆಚ್ಚಿನ ಒತ್ತಡ ಉಂಟಾಗಿತ್ತು ಎಂದು ಸಹೋದರ ಆರೋಪಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.