ADVERTISEMENT

ಪಶ್ಚಿಮ ಬಂಗಾಳ: ಮಮತಾ ಬ್ಯಾನರ್ಜಿ ಚುನಾವಣಾ ಪ್ರಚಾರಕ್ಕೆ 24 ಗಂಟೆ ನಿಷೇಧ

ಪಿಟಿಐ
Published 12 ಏಪ್ರಿಲ್ 2021, 19:15 IST
Last Updated 12 ಏಪ್ರಿಲ್ 2021, 19:15 IST
ಮಮತಾ ಬ್ಯಾನರ್ಜಿ (ಪಿಟಿಐ ಸಂಗ್ರಹ ಚಿತ್ರ)
ಮಮತಾ ಬ್ಯಾನರ್ಜಿ (ಪಿಟಿಐ ಸಂಗ್ರಹ ಚಿತ್ರ)   

ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು 24 ಗಂಟೆ ಪ್ರಚಾರ ನಡೆಸುವುದಕ್ಕೆ ನಿಷೇಧ ಹೇರಿ ಚುನಾವಣಾ ಆಯೋಗವು ಸೋಮವಾರ ಆದೇಶ ಹೊರಡಿಸಿದೆ. ಸೋಮವಾರ ರಾತ್ರಿ 8ರಿಂದ ಮಂಗಳವಾರ ರಾತ್ರಿ 8ರವರೆಗೆ ನಿಷೇಧ ಜಾರಿಯಲ್ಲಿ ಇರಲಿದೆ.

‘ಧರ್ಮಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಮತ್ತು ಭದ್ರತಾಪಡೆಗಳ ವಿರುದ್ಧ ಮಮತಾ ಬ್ಯಾನರ್ಜಿ ಅವರು ನೀಡಿರುವ ಹೇಳಿಕೆಗಳು ರಾಜ್ಯದಾದ್ಯಂತ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತಂದಿದೆ. ಹೀಗಾಗಿ ಅವರ ಪ್ರಚಾರದ ಮೇಲೆ ನಿಷೇಧ ಹೇರಲಾಗಿದೆ’ ಎಂದು ಚುನಾವಣಾ ಆಯೋಗವು ಹೇಳಿದೆ.

‘ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವವರೆಗೂ ಮಮತಾ ಅವರು ಇಂತಹ ಹೇಳಿಕೆ ನೀಡಬಾರದು ಎಂದು ಎಚ್ಚರಿಕೆ ನೀಡುತ್ತಿದ್ದೇವೆ’ ಎಂದು ಆಯೋಗವು ಹೇಳಿದೆ.

ADVERTISEMENT

ಮುಸ್ಲಿಮರು ಒಂದಾಗಬೇಕು. ಬಿಜೆಪಿ ವಿರುದ್ಧ ಮತ ಚಲಾಯಿಸಬೇಕು ಎಂದು ಮಮತಾ ಬ್ಯಾನರ್ಜಿ ಅವರು ಪ್ರಚಾರದಲ್ಲಿ ಹೇಳಿದ್ದರು. ಈ ಹೇಳಿಕೆಯು ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆ ಎಂದು ಚುನಾವಣಾ ಆಯೋಗಕ್ಕೆಬಿಜೆಪಿ ದೂರು ನೀಡಿತ್ತು. ‘ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿ ಎಂದು ಮಮತಾ ಅವರು ಜನರನ್ನು ಪ್ರಚೋದಿಸುತ್ತಿದ್ದಾರೆ’ ಎಂದೂ ಬಿಜೆಪಿ ಮತ್ತೊಂದು ದೂರು ನೀಡಿತ್ತು. ಈ ದೂರುಗಳಿಗೆ ಸಂಬಂಧಿಸಿದಂತೆ ಆಯೋಗವು ಮಮತಾ ಅವರಿಗೆ ಎರಡು ನೋಟಿಸ್ ನೀಡಿತ್ತು. ಎರಡು ನೋಟಿಸ್‌ಗಳಿಗೂ ಮಮತಾ ಉತ್ತರ ನೀಡಿದ್ದರು.

ಈಗ ಚುನಾವಣಾ ಆಯೋಗವು ಈ ಸಂಬಂಧ ಮಮತಾ ಅವರ ಪ್ರಚಾರದ ಮೇಲೆ ನಿಷೇಧ ಹೇರಿ ಕ್ರಮ ತೆಗೆದುಕೊಂಡಿದೆ. ಆಯೋಗದ ಈ ಕ್ರಮವನ್ನು ಟಿಎಂಸಿ ಖಂಡಿಸಿದೆ. ಆಯೋಗವು ಬಿಜೆಪಿಯ ಆಣತಿಯಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.

‘ಪ್ರಜಾಪ್ರಭುತ್ವದ ಹತ್ಯೆ’

ಬಿಜೆಪಿಯ ಒಂದು ಘಟಕವೇನೋ ಎಂಬಂತೆ ಚುನಾವಣಾ ಆಯೋಗ ವರ್ತಿಸುತ್ತಿದೆ. ಈ ನಿಷೇಧವು ನಿರಂಕುಶವಾದ ಕ್ರಮ. ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತಾವು ಸೋಲುತ್ತೇವೆ ಎಂದು ಬಿಜೆಪಿಗೆ ಮನದಟ್ಟಾಗಿದೆ. ಹೀಗಾಗಿ ಮಮತಾ ಬ್ಯಾನರ್ಜಿ ಅವರು ಪ್ರಚಾರ ಮಾಡುವುದನ್ನು ತಡೆಯುವ ಏಕೈಕ ಉದ್ದೇಶದಿಂದ ಚುನಾವಣಾ ಆಯೋಗವನ್ನು ಬಳಸಿಕೊಂಡು ಈ ನಿಷೇಧ ಹೇರಲಾಗಿದೆ. ನಾಚಿಕೆಯಾಗಬೇಕು

- ಕುನಾಲ್ ಘೋಷ್, ಟಿಎಂಸಿ ನಾಯಕ

***

ಇ.ಸಿ (ಎಲೆಕ್ಷನ್ ಕಮಿಷನ್/ಚುನಾವಣಾ ಆಯೋಗ) ಎಂಬುದನ್ನು ಎಕ್ಸ್‌ಟ್ರೀಮ್ಲಿ ಕಾಂಪ್ರಮೈಸ್ಡ್ ಎಂದು ಕರೆಯಬಹುದು. ಏಪ್ರಿಲ್ 12 ಭಾರತದ ಪ್ರಜಾಪ್ರಭುತ್ವದ ಕರಾಳ ದಿನ

- ಡೆರೆಕ್ ಒಬ್ರಿಯಾನ್, ಟಿಎಂಸಿ ಸಂಸದ

***

ಚುನಾವಣಾ ಆಯೋಗದ ಪ್ರಜಾಸತ್ತಾತ್ಮಕವಲ್ಲದ ಮತ್ತು ಸಂವಿಧಾನಬಾಹಿರವಾದ ಈ ನಿಷೇಧವನ್ನು ಖಂಡಿಸಿ, ಮಂಗಳವಾರ ಮಧ್ಯಾಹ್ನ ಕೋಲ್ಕತ್ತದ ಗಾಂಧಿ ಪ್ರತಿಮೆ ಎದುರು ಧರಣಿ ಕೂರುತ್ತೇನೆ

- ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ

***

ಪಶ್ಚಿಮ ಬಂಗಾಳ ವಿಧಾನಸಭೆಗೆ ಶನಿವಾರ ನಡೆದ ನಾಲ್ಕನೇ ಹಂತದ ಮತದಾನವು ಭಾರಿ ಹಿಂಸಾಚಾರಕ್ಕೆ ಸಾಕ್ಷಿಯಾಗಿತ್ತು. ಕೂಚ್‌ ಬಿಹಾರ್ ಜಿಲ್ಲೆಯ ಸೀತಾಲಕುಚಿ ಕ್ಷೇತ್ರದ 126ನೇ ಸಂಖ್ಯೆಯ ಮತಗಟ್ಟೆಯಲ್ಲಿಘರ್ಷಣೆ ಸಂಭವಿಸಿದ್ದ ವೇಳೆ ಸಿಐಎಸ್‌ಎಫ್‌ (ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ) ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಮೃತಪಟ್ಟಿದ್ದರು. ಘಟನೆಯು ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು.

ಮಮತಾ ಬ್ಯಾನರ್ಜಿ ಅವರು ಕೇಂದ್ರದ ಪಡೆಗಳಿಗೆ ಮುತ್ತಿಗೆ ಹಾಕುವಂತೆ ಕರೆ ನೀಡಿದ್ದೇ ಕೂಚ್‌ ಬಿಹಾರ್‌ನಲ್ಲಿ ಜನರು ಸಿಐಎಸ್‌ಎಫ್‌ ಮೇಲೆ ದಾಳಿಗೆ ಮುಂದಾಗಲು ಕಾರಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿದ್ದರು. ಪ್ರಧಾನಿ ನರೇಂದ್ರ ಮೋದಿಯವರೂ ಘಟನೆಗೆ ಮಮತಾರತ್ತಲೇ ಬೊಟ್ಟುಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.