ADVERTISEMENT

ಮತ ಎಣಿಕೆ ಬಳಿಕ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: ಡಿಜಿಪಿ ಕರೆಸಿಕೊಂಡ ರಾಜ್ಯಪಾಲರು

​ಪ್ರಜಾವಾಣಿ ವಾರ್ತೆ
Published 3 ಮೇ 2021, 13:58 IST
Last Updated 3 ಮೇ 2021, 13:58 IST
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಬೆಂಬಲಿಗರ ವಿಜಯೋತ್ಸವ–ಸಾಂದರ್ಭಿಕ ಚಿತ್ರ
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಬೆಂಬಲಿಗರ ವಿಜಯೋತ್ಸವ–ಸಾಂದರ್ಭಿಕ ಚಿತ್ರ   

ಕೋಲ್ಕತ್ತ: ವಿಧಾನಸಭೆ ಫಲಿತಾಂಶ ಘೋಷಣೆಯಾದ ಬೆನ್ನಲ್ಲೇ ಭಾನುವಾರ ಪಶ್ಚಿಮ ಬಂಗಾಳದ ಹಲವು ಸ್ಥಳಗಳಲ್ಲಿ ಹಿಂಸಾಚಾರ ನಡೆದಿದ್ದು, ತುರ್ತು ಕ್ರಮಗಳ ಬಗ್ಗೆ ಚರ್ಚಿಸಲು ರಾಜ್ಯಪಾಲರಾದ ಜಗದೀಪ್‌ ಧನಖಡ್‌ ರಾಜ್ಯದ ಡಿಜಿಪಿ ಅವರನ್ನು ಕರೆಸಿಕೊಂಡಿದ್ದಾರೆ.

ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜನರಿಗೆ ಮನವಿ ಮಾಡಿದ್ದಾರೆ.

ಭಾನುವಾರದಿಂದ ಪಕ್ಷದ ಕನಿಷ್ಠ ಐದು ಮಂದಿ ಕಾರ್ಯಕರ್ತರು ಹಾಗೂ ಬೆಂಬಲಿಗರ ಹತ್ಯೆ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ. ರಾಜ್ಯದಾದ್ಯಂತ ಪಕ್ಷದ ನೂರಾರು ಕಚೇರಿಗಳು ಹಾಗೂ ಮನೆಗಳ ಮೇಲೆ ದಾಳಿ ಮಾಡಲಾಗಿದೆ ಎಂದಿದೆ. ಆದರೆ, ಮಮತಾ ಬ್ಯಾನರ್ಜಿ ಬಿಜೆಪಿಯ ಆರೋಪಗಳನ್ನು ಅಲ್ಲಗಳೆದಿದ್ದಾರೆ.

ADVERTISEMENT

'ಮತ ಎಣಿಕೆ ನಂತರ ರಾಜ್ಯದಲ್ಲಿ ಹಿಂಸಾಚಾರ, ಲೂಟಿ ಹಾಗೂ ಹತ್ಯೆ ಮಾಡಿರುವ ಘಟನೆಗಳು ನಡೆದಿರುವುದು ಎಚ್ಚರಿಕೆಯ ಸನ್ನಿವೇಶವನ್ನು ಸೂಚಿಸಿವೆ. ರಾಜ್ಯದಲ್ಲಿ ಕಾನೂನು ಮತ್ತು ಸುಸ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪಶ್ಚಿಮ ಬಂಗಾಳದ ಡಿಜಿಪಿ ಮತ್ತು ಕೋಲ್ಕತ್ತದ ಕಮಿಷನರ್‌ ಅವರನ್ನು ಕರೆಸಿಕೊಂಡು ಅಗತ್ಯ ಕ್ರಮವಹಿಸುವಂತೆ ಸೂಚಿಸಿದ್ದೇನೆ' ಎಂದು ರಾಜ್ಯಪಾಲರು ಪ್ರಕಟಿಸಿದ್ದಾರೆ.

ಚುನಾವಣೆ ಫಲಿತಾಂಶದ ಬಳಿಕ ರಾಜಕೀಯ ಹಿಂಸಾಚಾರಗಳಲ್ಲಿ ಒಂಭತ್ತು ಜನರು ಸಾವಿಗೀಡಾಗಿದ್ದಾರೆ ಹಾಗೂ ಹಲವು ಮಂದಿ ಗಾಯಗೊಂಡಿರುವುದು ದುಃಖ ತಂದಿದೆ. ಜನರು ಶಾಂತಿ ಕಾಪಾಡಬೇಕು ಎಂದು ರಾಜ್ಯಪಾಲ ಜಗದೀಪ್‌ ಧನಖಡ್‌ ಆಗ್ರಹಿಸಿದ್ದಾರೆ.

ಎಂಟು ಹಂತಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ 292 ಸ್ಥಾನಗಳ ಪೈಕಿ 213 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಮಮತಾ ಸತತ 3ನೇ ಅವಧಿಗೆ ಅಧಿಕಾರ ಉಳಿಸಿಕೊಂಡಿದ್ದಾರೆ. 77 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿರುವ ಬಿಜೆಪಿಯು ಪ್ರಮುಖ ವಿರೋಧ ಪಕ್ಷವಾಗಿ ರೂಪುಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.