ADVERTISEMENT

ಶೀಘ್ರ ಉಪಚುನಾವಣೆ ನಡೆಸಲು ಪಶ್ಚಿಮ ಬಂಗಾಳ ಸರ್ಕಾರ ಒತ್ತಾಯ

ಪಿಟಿಐ
Published 3 ಜುಲೈ 2021, 1:20 IST
Last Updated 3 ಜುಲೈ 2021, 1:20 IST
ಮಮತಾ ಬ್ಯಾನರ್ಜಿ (ಪಿಟಿಐ ಸಂಗ್ರಹ ಚಿತ್ರ)
ಮಮತಾ ಬ್ಯಾನರ್ಜಿ (ಪಿಟಿಐ ಸಂಗ್ರಹ ಚಿತ್ರ)   

ಕೋಲ್ಕತ್ತ: ರಾಜ್ಯದಲ್ಲಿ ಬಾಕಿ ಇರುವ ಉಪಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಬೇಕು ಎಂದು ಪಶ್ಚಿಮ ಬಂಗಾಳ ಸರ್ಕಾರ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. ಚುನಾವಣಾ ಪ್ರಕ್ರಿಯೆ ವೇಳೆ ಕೋವಿಡ್–19 ನಿಯಮಗಳನ್ನು ಪಾಲಿಸುವುದಾಗಿಯೂ ಸರ್ಕಾರ ಭರವಸೆ ನೀಡಿದೆ.

ಏಳು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಬೇಕಿದ್ದು ಈ ಪೈಕಿ ಭವಾನಿಪುರ ಕ್ಷೇತ್ರ ಗಮನ ಸೆಳೆದಿದೆ. ಇಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂಬ ವದಂತಿ ಹಬ್ಬಿದೆ.

ಮಮತಾ ಅವರು ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸ್ವ ಕ್ಷೇತ್ರ ಭವಾನಿಪುರ ಬಿಟ್ಟು ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ನಂದಿಗ್ರಾಮದಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದರು. ಭವಾನಿಪುರದಲ್ಲಿ ಗೆಲುವು ಸಾಧಿಸಿದ್ದ ಟಿಎಂಸಿ ನಾಯಕ, ಸಚಿವ ಶೋಭಾನ್ ದೇವ್ ಅವರು ಮಮತಾಗಾಗಿ ಸ್ಥಾನ ತೆರವುಗೊಳಿಸಿದ್ದಾರೆ.

ADVERTISEMENT

ರಾಜ್ಯಸಭೆಗೆ ರಾಜ್ಯದಿಂದ ತೆರವಾಗಿರುವ ಎರಡು ಸ್ಥಾನಗಳಿಗೂ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಸರ್ಕಾರ, ಈ ವಿಚಾರದಲ್ಲಿ ಸಂಪೂರ್ಣವಾಗಿ ಸಿದ್ಧವಿರುವುದಾಗಿ ತಿಳಿಸಿದೆ. ಜತೆಗೆ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಸುವಂತೆಯೂ ಒತ್ತಾಯಿಸಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.