ಪಶ್ಚಿಮ ಬಂಗಾಳದಲ್ಲಿ ಬಿಗಿ ಭದ್ರತೆ
(ಪಿಟಿಐ ಚಿತ್ರ)
ಕೋಲ್ಕತ್ತ: ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ ವಿರುದ್ಧ ನಡೆದ ಹಿಂಸಾತ್ಮಕ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಮತ್ತೆ 12 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದರೊಂದಿಗೆ ಒಟ್ಟು ಬಂಧಿತರ ಸಂಖ್ಯೆ 150ಕ್ಕೆ ಏರಿಕೆಯಾಗಿದೆ. ಮುಸ್ಲಿಂ ಬಾಹುಲ್ಯದ ಜಿಲ್ಲೆಯಲ್ಲಿ ನಡೆದ ಹಿಂಸಾಚಾರ ಘಟನೆಯಲ್ಲಿ ಈವರೆಗೆ ಮೂವರು ಮೃತಪಟ್ಟಿದ್ದಾರೆ.
'ಪ್ರದೇಶದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಹೊಸದಾಗಿ ಹಿಂಸಾಚಾರದ ಘಟನೆ ವರದಿಯಾಗಿಲ್ಲ' ಎಂದು ಪೊಲೀಸರು ತಿಳಿಸಿದ್ದಾರೆ.
'ಸುತಿ, ಧುಲಿಯನ್, ಶಂಷೇರ್ಗಂಜ್ ಮತ್ತು ಜಂಗೀಪುರ ಪ್ರದೇಶದಲ್ಲಿ ಸ್ಥಿತಿ ಶಾಂತಿಯುತವಾಗಿವೆ. ರಾತ್ರಿಯಿಡೀ ನಡೆಸಿದ ಕಾರ್ಯಾಚರಣೆಯಲ್ಲಿ ಮತ್ತೆ 12 ಮಂದಿಯನ್ನು ಬಂಧಿಸಲಾಗಿದೆ. ಇದರೊಂದಿಗೆ ಒಟ್ಟು 150 ಮಂದಿಯನ್ನು ಬಂಧಿಸಲಾಗಿದೆ' ಎಂದು ಅವರು ತಿಳಿಸಿದ್ದಾರೆ.
ಹಿಂಸಾಚಾರಪೀಡಿತ ಪ್ರದೇಶಗಳಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್ಎಸ್ಎಸ್) ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆಯನ್ನು ಹೇರಲಾಗಿದೆ. ಪ್ರದೇಶದಲ್ಲಿ ಇಂಟರ್ನೆಟ್ ಸೇವೆಯನ್ನು ನಿರ್ಬಂಧಿಸಲಾಗಿದೆ.
'ಹಿಂಸಾಚಾರ ಸಂಬಂಧ ತನಿಖೆ ಪ್ರಗತಿಯಲ್ಲಿದೆ. ಮತ್ತಷ್ಟು ಮಂದಿಯ ಬಂಧನವಾಗುವ ಸಾಧ್ಯತೆಯಿದೆ. ಭದ್ರತಾ ಪಡೆಗಳು ವಾಹನಗಳನ್ನು ಪರಿಶೀಲಿಸುತ್ತವೆ. ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ತಿರುಗುತ್ತಿವೆ' ಎಂದು ಪೊಲೀಸರು ತಿಳಿಸಿದ್ದಾರೆ.
ಶಂಷೇರ್ಗಂಜ್ ಪ್ರದೇಶದ ಜಾಫರಾಬಾದ್ನ ಮನೆಯೊಂದರಲ್ಲಿ ತಂದೆ ಹಾಗೂ ಮಗನ ಮೃತದೇಹ ಪತ್ತೆಯಾಗಿತ್ತು. ಅವರನ್ನು ಹರಗೋವಿಂದೊ ದಾಸ್ ಮತ್ತು ಚಂದನ್ ಎಂದು ಗುರುತಿಸಲಾಗಿದೆ. ಇಬ್ಬರ ದೇಹದಲ್ಲೂ ಇರಿತದ ಗಾಯಗಳು ಪತ್ತೆಯಾಗಿತ್ತು. ಮೃತಪಟ್ಟ ಮೂರನೇ ವ್ಯಕ್ತಿಯನ್ನು 21 ವರ್ಷದ ಇಜಾಜ್ ಮೋಮಿನ್ ಎಂದು ಗುರುತಿಸಲಾಗಿದ್ದು, ಸೂತಿಯ ಸಜೂರ್ ಮೋರ್ನಲ್ಲಿ ನಡೆದ ಘರ್ಷಣೆಯಲ್ಲಿ ಗುಂಡೇಟಿಗೆ ಬಲಿಯಾಗಿದ್ದರು.
ಉದ್ರಿಕ್ತ ಗುಂಪು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದವು. ಹಲವು ಕಡೆಗಳಲ್ಲಿ ಕಲ್ಲು ತೂರಾಟದ ಘಟನೆ ವರದಿಯಾಗಿತ್ತು. 18 ಪೊಲೀಸರು ಗಾಯಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.