ADVERTISEMENT

ದಾಖಲೆಗಳಿಲ್ಲದ ವಿದೇಶಿ ಪ್ರಜೆಗಳ ಗಡಿಪಾರು: ಮಾನದಂಡ ಪ್ರಶ್ನಿಸಿದ ಹೈಕೋರ್ಟ್

ಪಿಟಿಐ
Published 6 ಮೇ 2021, 11:13 IST
Last Updated 6 ಮೇ 2021, 11:13 IST
ದೆಹಲಿ ಹೈಕೋರ್ಟ್‌
ದೆಹಲಿ ಹೈಕೋರ್ಟ್‌   

ನವದೆಹಲಿ: ‘ಯಾವುದೇ ದಾಖಲೆಗಳಿಲ್ಲದೆ ಭಾರತದಲ್ಲಿರುವ ವಿದೇಶಿ ಪ್ರಜೆಗಳನ್ನು ವಾಪಸ್‌ ಕಳುಹಿಸಲು ಯಾವ ಮಾನದಂಡವನ್ನು ಅನುಸರಿಸಲಾಗುತ್ತಿದೆ’ ಎಂದು ಕೇಂದ್ರ ಗೃಹ ಸಚಿವಾಲಯವನ್ನು ದೆಹಲಿ ಹೈಕೋರ್ಟ್‌ ಪ್ರಶ್ನಿಸಿದೆ.

‘ಮಾರ್ಚ್‌ ತಿಂಗಳಲ್ಲಿ ನಮ್ಮನ್ನು ಅಪಹರಿಸಿ ಭಾರತಕ್ಕೆ ಕರೆತರಲಾಗಿದೆ. ನಾವು ವಾಪಸ್‌ ಹೋಗಲು ಅವಕಾಶ ಮಾಡಿಕೊಡಬೇಕು’ ಎಂದು ಕೋರಿ ಬಾಂಗ್ಲಾದೇಶದ ಮೂವರು ಯುವಕರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರತಿಭಾ ಎಂ.ಸಿಂಗ್‌ ಅವರು, ‘ಈ ರೀತಿ ಭಾರತದಲ್ಲಿರುವ ವಿದೇಶಿ ಪ್ರಜೆಗಳನ್ನು ಅವರ ದೇಶಕ್ಕೆ ವಾಪಸ್‌ ಕಳುಹಿಸಲು ಯಾವ ವಿಧಾನವನ್ನು ಅನುಸರಿಸಲಾಗುತ್ತಿದೆ. ಇದಕ್ಕೆ ಎಷ್ಟು ಸಮಯ ಬೇಕು ಎಂಬ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ’ ಗೃಹ ಸಚಿವಾಲಯಕ್ಕೆ ಸೂಚಿಸಿದ್ದಾರೆ.

ADVERTISEMENT

‘ಒಂದು ವೇಳೆ ಈ ಮೂವರ ಗಡಿಪಾರಿಗೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಹೈಕಮಿಷನ್‌ಗೆ ಮನವಿ ಪತ್ರ ಸಲ್ಲಿಸಿದ್ದರೆ ಅದನ್ನು ಕೂಡ ನ್ಯಾಯಾಲಯಕ್ಕೆ ಸಲ್ಲಿಸಬೇಕು’ ಎಂದು ಅವರು ತಿಳಿಸಿದ್ದಾರೆ.

‘ಮೇ 12ರೊಳಗೆ ಪ್ರಮಾಣ ಪತ್ರದ ಜತೆಗೆ ಗಡಿಪಾರು ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಇಲ್ಲವಾದ್ದಲ್ಲಿ ಸಚಿವಾಲಯದ ಹಿರಿಯ ಅಧಿಕಾರಿ ಮೇ 17ರಂದು ನಡೆಯಲಿರುವ ವಿಚಾರಣೆಗೆ ಹಾಜರಾಗಬೇಕು’ ಎಂದು ನ್ಯಾಯಾಲಯ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.