ನವದೆಹಲಿ: ಲಖಿಂಪುರ ಖೇರಿ ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಏಕೆ ಮೌನವಹಿಸಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.
‘ಲಖಿಂಪುರ ಖೇರಿ ಘಟನೆ ಭಯಾನಕವಾದದ್ದು. ಮೋದಿ ಜೀ, ನೀವೇಕೆ ಮೌನವಾಗಿದ್ದೀರಿ? ನಿಮ್ಮಿಂದ ಕೇವಲ ಒಂದು ಅನುಕಂಪದ ಮಾತನ್ನು ನಾವು ನಿರೀಕ್ಷಿಸುತ್ತೇವೆ. ಅದು ಕಷ್ಟವಾಗಬಾರದು’ ಎಂದು ಅವರು ಟ್ವೀಟ್ ಮಾಡಿದ್ದಾರೆ.
‘ನೀವು ವಿರೋಧ ಪಕ್ಷದಲ್ಲಿ ಇದ್ದಿದ್ದರೆ ಹೇಗೆ ಪ್ರತಿಕ್ರಿಯಿಸುತ್ತಿದ್ದಿರಿ? ದಯವಿಟ್ಟು ನಮಗೆ ತಿಳಿಸಿ’ ಎಂದು ಅವರು ಕೇಳಿದ್ದಾರೆ.
ಲಖಿಂಪುರ ಖೇರಿ ಹಿಂಸಾಚಾರದ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಸಿಬಲ್ ಅವರು ಈ ವಾರದ ಆರಂಭದಲ್ಲಿ ಸುಪ್ರೀಂ ಕೋರ್ಟ್ ಅನ್ನು ಆಗ್ರಹಿಸಿದ್ದರು.
ಈ ಕುರಿತು ಸುಪ್ರೀಂಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರಿಂದ ಸಿಬಲ್ ಅವರು ಮುಖ್ಯ ನ್ಯಾಯಮೂರ್ತಿಗೆ ಧನ್ಯವಾದ ಅರ್ಪಿಸಿದ್ದಾರೆ. ಭಾರತದಲ್ಲಿ ನ್ಯಾಯಾಲಯಗಳು ಧ್ವನಿ ಇಲ್ಲದವರ ನಂಬಿಕೆಯನ್ನು ಪುನಃ ಸ್ಥಾಪಿಸುವ ದೇವಾಲಯಗಳಾಗಿವೆ ಎಂದು ಹೇಳಿದ್ದಾರೆ.
ಕೇಂದ್ರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಆಂದೋಲನ ಮಾಡುತ್ತಿದ್ದ ಒಂದು ಗುಂಪು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ಲಖಿಂಪುರ ಖೇರಿಯಲ್ಲಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದಾಗ, ಎರಡು ಎಸ್ಯವಿಗಳು ಹರಿದು ನಾಲ್ವರು ರೈತರು ಮೃತಪಟ್ಟರು. ಇದರಿಂದ ಕೋಪಗೊಂಡ ಪ್ರತಿಭಟನಕಾರರು ಬಿಜೆಪಿಯ ಇಬ್ಬರು ಕಾರ್ಯಕರ್ತರು ಮತ್ತು ಚಾಲಕನನ್ನು ಕೊಂದರು. ಈ ಹಿಂಸಾಚಾರದಲ್ಲಿ ಸ್ಥಳೀಯ ಪತ್ರಕರ್ತರೊಬ್ಬರೂ ಮೃತಪಟ್ಟಿದ್ದಾರೆ.
ಈ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ವಿಚಾರಣೆಗೆ ಕರೆದಿದ್ದಾರೆ.
ಇವನ್ನೂ ಓದಿ
*ಲಖಿಂಪುರ ಹಿಂಸಾಚಾರ ಖಂಡಿಸಿದ ಆರ್ಎಸ್ಎಸ್ ನಾಯಕ; ವಿರೋಧ ಪಕ್ಷದ ವಿರುದ್ಧ ಕಿಡಿ
*ಲಖಿಂಪುರ ಹಿಂಸಾಚಾರ: ಮುಂದಿನ ಕ್ರಮ ಕೈಗೊಳ್ಳಲು ಸಂಯುಕ್ತ ಕಿಸಾನ್ ಮೋರ್ಚಾ ಸಭೆ ಇಂದು
*ಲಖಿಂಪುರ್–ಖೇರಿ ಹಿಂಸಾಚಾರ: ಪಂಜಾಬ್ನಲ್ಲಿ ಕಾಂಗ್ರೆಸ್ಗೆ ಲಾಭ ಸಾಧ್ಯತೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.