ADVERTISEMENT

ವಸುಂಧರಾ ಮೇಲೆ ಕ್ರಮವೇಕಿಲ್ಲ: ತಮ್ಮದೇ ಸರ್ಕಾರವನ್ನು ಪ್ರಶ್ನಿಸಿದ ಪೈಲಟ್‌

​ಪ್ರಜಾವಾಣಿ ವಾರ್ತೆ
Published 19 ಜನವರಿ 2023, 14:08 IST
Last Updated 19 ಜನವರಿ 2023, 14:08 IST
ಸಚಿನ್‌ ಪೈಲಟ್‌
ಸಚಿನ್‌ ಪೈಲಟ್‌   

ಜೈಪುರ: ಬಿಜೆಪಿ ನಾಯಕಿ, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಬಗ್ಗೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿರುವ ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್‌ ಅವರು ಸ್ವಪಕ್ಷದ ನಾಯಕ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಅವರನ್ನು ಗುರಿಯಾಗಿಸಿ ವಾಗ್ದಾಳಿ ಮುಂದುವರಿಸಿದ್ದಾರೆ.

ಪಾಲಿ ಜಿಲ್ಲೆಯಲ್ಲಿ ನಡೆದ ಕಿಸಾನ್‌ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಅವರು, ‘ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ, ಬಿಜೆಪಿ ನಾಯಕಿಯ ವಿರುದ್ಧದ ಹಗರಣಗಳ ಬಗ್ಗೆ ತನಿಖೆ ನಡೆಸಲಾಗುವುದು. ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದು ನಾವು ಭರವಸೆ ನೀಡಿದ್ದೆವು. ನಾಲ್ಕು ವರ್ಷಗಳು ಕಳೆದರೂ ಕ್ರಮ ಕೈಗೊಳ್ಳದಿರುವುದು ಆಶ್ಚರ್ಯ ಮೂಡಿಸಿದೆ ಎಂದು ರಾಜ್ಯ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯೂ ಆಗಿದ್ದ ಪೈಲಟ್‌ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ಪರೋಕ್ಷ ಟೀಕಾ ಪ್ರಹಾರ ಮಾಡಿದರು.

‘ಕೇಂದ್ರದ ಬಿಜೆಪಿ ನಾಯಕರು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ಧ ಸುಳ್ಳು ಆರೋಪ ಮಾಡುತ್ತಾರೆ. ನಮ್ಮ ನಾಯಕರ ಮೇಲೆ ಪ್ರಕರಣಗಳು ದಾಖಲಾಗಿದ್ದು, ವಿಚಾರಣೆಗೆ ಜಾರಿ ನಿರ್ದೇಶನಾಲಯವು ಕರೆಸಿಕೊಳ್ಳುತ್ತದೆ. ನಮ್ಮ ನಾಯಕರನ್ನು ಅವಮಾನಿಸಲಾಗುತ್ತಿದೆ. ಆದರೆ, ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ರಾಜಸ್ಥಾನದ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಸರ್ಕಾರ ಏಕೆ ಕ್ರಮ ಕೈಗೊಂಡಿಲ್ಲ’ ಎಂದು ಪೈಲಟ್ ಆಶ್ಚರ್ಯಪಟ್ಟರು.

ADVERTISEMENT

‘ಸರ್ಕಾರವು ತನ್ನ ಆಡಳಿತದ ಉಳಿದ 11 ತಿಂಗಳಲ್ಲಿ ಬಿಜೆಪಿ ನಾಯಕರ ವಿರುದ್ಧದ ಹಗರಣಗಳ ತನಿಖೆ ನಡೆಸಿ ಕ್ರಮ ಕೈಗೊಳ್ಳಲಿದೆ. ಆ ಮೂಲಕ ಜನರ ನಂಬಿಕೆ ಉಳಿಸಿಕೊಳ್ಳಲಿದೆ’ ಎಂದು ಅವರು ಆಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.