ADVERTISEMENT

ಯುದ್ಧ ನಿಲ್ಲಿಸಿದ್ದಾಗಿ ಟ್ರಂಪ್ 8ನೇ ಬಾರಿ ಹೇಳಿಕೆ: ಮೋದಿ ಮೌನವೇಕೆ?; ಕಾಂಗ್ರೆಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಮೇ 2025, 7:35 IST
Last Updated 22 ಮೇ 2025, 7:35 IST
ಜೈರಾಂ ರಮೇಶ್
ಜೈರಾಂ ರಮೇಶ್   

ನವದೆಹಲಿ: ‘ವ್ಯಾಪಾರವನ್ನು ಮುಂದಿಟ್ಟುಕೊಂಡು ನಾನು ಪಾಕಿಸ್ತಾನ ಮತ್ತು ಭಾರತ ಮಧ್ಯೆ ನಡೆಯುತ್ತಿದ್ದ ಸಂಘರ್ಷವನ್ನು ನಿಲ್ಲಿಸಿದೆ. ಎರಡೂ ದೇಶಗಳ ಸಂಘರ್ಷ ಶಮನದಲ್ಲಿ ಮಧ್ಯಸ್ಥಿಕೆ ವಹಿಸಿದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಎಂಟನೇ ಬಾರಿಗೆ ಹೇಳಿದ್ದಾರೆ. ಆದರೆ, ಪ್ರಧಾನಿ ಮೋದಿ ಮಾತ್ರ ಈ ಬಗ್ಗೆ ದಿವ್ಯ ಮೌನ ವಹಿಸಿದ್ದಾರೆ’ ಎಂದು ಕಾಂಗ್ರೆಸ್‌ ಗುರುವಾರ ದೂರಿದೆ.

ಟ್ರಂಪ್‌ ಅವರು ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್‌ ರಾಮಫೋಸಾ ಅವರೊಂದಿಗೆ ಶ್ವೇತಭವನದಲ್ಲಿ ಮಾತುಕತೆ ನಡೆಸಿದರು. ಈ ವೇಳೆ ಭಾರತ–ಪಾಕಿಸ್ತಾನ ಸಂಘರ್ಷ ಶಮನ ಕುರಿತು ಟ್ರಂಪ್‌ ಮತ್ತೊಮ್ಮೆ ಪ್ರಸ್ತಾಪ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌, ‘ಕಳೆದ 11 ದಿನಗಳಲ್ಲಿ 8ನೇ ಬಾರಿಗೆ ಟ್ರಂಪ್‌ ಅವರು ಸಂಘರ್ಷ ಶಮನವನ್ನು ನಾನೇ ಮಾಡಿಸಿದ್ದು ಎನ್ನುತ್ತಿದ್ದಾರೆ. ಪಾಕ್‌ ಪ್ರಧಾನಿ  ಮತ್ತು ಭಾರತದ ಪ್ರಧಾನಿ ಮೋದಿ ಅವರನ್ನು ಒಂದೇ ತಟ್ಟೆಯಲ್ಲಿಟ್ಟು ತೂಗುತ್ತಿದ್ದಾರೆ. ವ್ಯಾಪಾರವನ್ನು ಬಳಸಿಕೊಂಡು ಸಂಘರ್ಷ ಶಮನಗೊಳಿಸಿದೆ ಎಂದು ಹೇಳುತ್ತಲೇ ಇದ್ದಾರೆ’ ಎಂದಿದ್ದಾರೆ.

ADVERTISEMENT

‘ಇಷ್ಟೆಲ್ಲಾ ಆಗುತ್ತಿದ್ದರೂ ಟ್ರಂಪ್‌ ಅಣ್ಣನ ಆತ್ಮೀಯ ಸ್ನೇಹಿತ ಮಾತ್ರ ಸಂಪೂರ್ಣವಾಗಿ ಮೌನ ವಹಿಸಿದ್ದಾರೆ. ‘ತಟಸ್ಥ ದೇಶ’ವೊಂದರಲ್ಲಿ ಭಾರತ–ಪಾಕಿಸ್ತಾನ ಮಾತುಕತೆ ನಡೆಸಬೇಕು ಎಂದು ಟ್ರಂಪ್‌ ಅವರ ಹೇಳಿಕೆಗಳಿಗೆ ಪುಷ್ಠಿ ನೀಡುವಂತೆ ಅಮೆರಿಕದ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ವಿದೇಶಾಂಗ ಸಚಿವರು ಕೂಡ ಮೌನ ವಹಿಸಿದ್ದಾರೆ’ ಎಂದರು.

‘ಆಪರೇಷನ್‌ ಸಿಂಧೂರವನ್ನು ಅಂತ್ಯಗೊಳಿಸಲು ವ್ಯಾಪಾರವನ್ನು ಬಳಸಿದೆ ಎಂದು ಟ್ರಂಪ್ ಅವರು ಹೇಳುತ್ತಿದ್ದಾರೆ. ಈ ಹೇಳಿಕೆಯನ್ನು ಪ್ರಧಾನಿ ಮೋದಿ ಅವರು ಒಮ್ಮೆಯೂ ತಿರಸ್ಕರಿಸಿಲ್ಲ. ಈ ಮೌನ ಏನು ಹೇಳುತ್ತದೆ’ ಎಂದು ಕಾಂಗ್ರೆಸ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್‌ ಖೇರಾ ಪ್ರಶ್ನಿಸಿದ್ದಾರೆ.

ಟ್ರಂಪ್ ಹೇಳಿದ್ದೇನು?

ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ಸಂಘರ್ಷವನ್ನು ವ್ಯಾಪಾರವನ್ನು ಮುಂದಿಟ್ಟುಕೊಂಡು ಸ್ಥಗಿತಗೊಳಿಸಿರುವುದಾಗಿ ಟ್ರಂಪ್, ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ ಪುನರುಚ್ಚರಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಎರಡರೊಂದಿಗೂ ಅಮೆರಿಕ ದೊಡ್ಡ ವ್ಯವಹಾರ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ನೀವು ಗುಂಡು ಹಾರಿಸುತ್ತಾ ಹೋದರೆ, ಅದಕ್ಕೆ ಮಿತಿಯೇ ಇರುವುದಿಲ್ಲ. ಪರಿಸ್ಥಿತಿ ದಿನದಿಂದ ದಿನಕ್ಕೆ ಕೆಟ್ಟದಾಗುತ್ತಾ ಹೋಗುತ್ತದೆ. ಮತ್ತಷ್ಟು ಗಂಭೀರವಾಗುತ್ತಾ ಹೋಗುತ್ತದೆ ಎಂದು ನಾವು ಅವರ ಜೊತೆ ಮಾತನಾಡಿದೆವು. ಅದಾದ, ಎರಡು ದಿನಗಳ ನಂತರ ಫಲಿತಾಂಶ ಬಂದಿತು ಎಂದು ಅವರು ಹೇಳಿದ್ದಾರೆ.

'ಪಾಕಿಸ್ತಾನದಲ್ಲಿ ಕೆಲ ಒಳ್ಳೆಯ ನಾಯಕರಿದ್ದಾರೆ. ಭಾರತದ ಪ್ರಧಾನಿ ಮೋದಿ ನನ್ನ ಸ್ನೇಹಿತ’ಎಂದು ಟ್ರಂಪ್ ಹೇಳಿದ್ದಾರೆ. ಮೋದಿ ನಮಗೂ ಸ್ನೇಹಿತ ಎಂದು ದಕ್ಷಿಣ ಆಫ್ರಿಕಾದ ಅಧ್ಯಕ್ಷರು ಪ್ರತಿಕ್ರಿಯಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು ಇತ್ಯರ್ಥಗೊಳಿಸಲು ಸಹಾಯ ಮಾಡಿದೆ ಎಂದು ಅಮೆರಿಕ ಅಧ್ಯಕ್ಷರು ಪದೇ ಪದೇ ಹೇಳಿಕೊಳ್ಳುತ್ತಿದ್ದಾರೆ. ಈ ಹಿಂದೆಯೂ ಅವರು ಇದೇ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ.

ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತವು ಮೇ 7ರಿಂದ ಪಾಕಿಸ್ತಾನದ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ‘ಆಪರೇಷನ್ ಸಿಂಧೂರ' ಅಡಿಯಲ್ಲಿ ನಿಖರವಾದ ದಾಳಿಗಳನ್ನು ನಡೆಸಿತ್ತು. ಇದರಲ್ಲಿ ನೂರಾರು ಉಗ್ರರನ್ನು ಕೊಂದಿತ್ತು.

ನಂತರ, ಪಾಕಿಸ್ತಾನವು ಮೇ 8, 9 ಮತ್ತು 10ರಂದು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತ್ತು. ಬಳಿಕ, ಭಾರತೀಯ ಪಡೆಗಳು ಪಾಕಿಸ್ತಾನದ ಹಲವು ಸೇನಾ ನೆಲೆಗಳ ಮೇಲೆ ಉಗ್ರ ಪ್ರತಿದಾಳಿ ನಡೆಸಿದ್ದವು.

ನಾಲ್ಕು ದಿನಗಳ ತೀವ್ರ ಗಡಿಯಾಚೆಗಿನ ಡ್ರೋನ್ ಮತ್ತು ಕ್ಷಿಪಣಿ ದಾಳಿಯ ನಂತರ ಉಭಯ ದೇಶಗಳು ಯುದ್ಧ ವಿರಾನಕ್ಕೆ ಸಮ್ಮತಿಸಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.