ನಾಗ್ಪುರ: ಮಹಾರಾಷ್ಟ್ರವು ಪ್ರವಾಹದ ಪರಿಣಾಮದ ಕುರಿತು ನಡೆಸಲಾಗುತ್ತಿರುವ ಅಧ್ಯಯನವನ್ನು ಪೂರ್ಣಗೊಳಿಸುವ ವರೆಗೆ ಆಲಮಟ್ಟಿ ಜಲಾಶಯ ಎತ್ತರಿಸುವ ಕೆಲಸವನ್ನು ನಿಲ್ಲಿಸುವಂತೆ ಕರ್ನಾಟಕಕ್ಕೆ ಮನವಿ ಮಾಡಲಾಗುವುದು ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿದ್ದಾರೆ.
ಮಹಾರಾಷ್ಟ್ರದ ಕೋರಿಕೆಗೆ ಕರ್ನಾಟಕ ಲಕ್ಷ್ಯಕೊಡದಿದ್ದರೆ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಫಡಣವೀಸ್ ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕವು ಆಲಮಟ್ಟಿ ಜಲಾಶಯವನ್ನು 524.256 ಮೀಟರ್ ಎತ್ತರಿಸುವುದರಿಂದ ಸಾಂಗ್ಲಿ ಮತ್ತು ಕೊಲ್ಹಾಪುರದಲ್ಲಿ ಸಂಭವಿಸಬಹುದಾದ ಪ್ರವಾಹ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ಮಹಾರಾಷ್ಟ್ರ ಸರ್ಕಾರ ತಜ್ಞರ ಸಮಿತಿಯನ್ನು ನೇಮಿಸಿದೆ. ಜಲಸಂಪನ್ಮೂಲ ಇಲಾಖೆಯ ಮಾಜಿ ಪ್ರಧಾನ ಕಾರ್ಯದರ್ಶಿ ನಂದಕುಮಾರ್ ವಡ್ನೆರಾ ಅವರ ನೇತೃತ್ವದಲ್ಲಿ ಅಧ್ಯಯನ ನಡೆಯುತ್ತಿದೆ ಎಂದು ಫಡಣವೀಸ್ ತಿಳಿಸಿದರು.
2019ರ ಭೀಕರ ಪ್ರವಾಹದ ನಂತರ ಈ ಅಧ್ಯಯನ ತಂಡವನ್ನು ರಚಿಸಲಾಗಿದೆ.
2020 ಮೇ 27ರಂದು ಸಲ್ಲಿಕೆಯಾದ ಅಧ್ಯಯನ ವರದಿಯಲ್ಲಿ ಆಲಮಟ್ಟಿ ಜಲಾಶಯ ಎತ್ತರಿಸುವುದರಿಂದ ಮಹಾರಾಷ್ಟ್ರದ ಎರಡು ಜಿಲ್ಲೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಸಂಭವಿಸುವುದಿಲ್ಲ ಎಂದಿತ್ತು. ಆದರೆ ಸೆಪ್ಟೆಂಬರ್ 2021ರಂದು ವಡ್ನೆರಾ ಅವರು ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರಬರೆದು, ಅಧ್ಯಯನದ ಸಂದರ್ಭ ಕರ್ನಾಟಕವು ಚೆಕ್ ಡ್ಯಾಂಗಳನ್ನು ನಿರ್ಮಿಸುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿರಲಿಲ್ಲ. ಇದರಿಂದ ಸಾಂಗ್ಲಿ ಮತ್ತು ಕೊಲ್ಹಾಪುರದಲ್ಲಿ ಪ್ರವಾಹ ಸಂಭವಿಸಬಹುದು ಎಂದಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.