ಪ್ರಧಾನಿ ನರೇಂದ್ರ ಮೋದಿ, ಸುಬ್ರಮಣಿಯನ್ ಸ್ವಾಮಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಇಂದು (ಶುಕ್ರವಾರ) ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.
2014ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ‘ಸುಳ್ಳುಗಾರ’ ಮೋದಿ ಪರ ಪ್ರಚಾರ ಮಾಡಿದ್ದಕ್ಕಾಗಿ ಪ್ರಾಯಶ್ಚಿತ್ತ ಮಾಡಿಕೊಳ್ಳುತ್ತೇನೆ ಎಂದು ಟೀಕಿಸಿದ್ದಾರೆ.
‘ಮೋದಿ ಅಕ್ಬರ್ ಎಂದಾದರೆ, ಆತನಿಗೆ ಸರ್ವಸ್ವವನ್ನೂ ಸಮರ್ಪಿಸುವ ಬೀರ್ಬಲ್ ಆಗಲು ನಾನು ಒಪ್ಪುವುದಿಲ್ಲ. ಪ್ರಧಾನಿಯಾದ ಮೊದಲ 15 ದಿನಗಳಲ್ಲಿ ವಿದೇಶಿ ಬ್ಯಾಂಕ್ಗಳಲ್ಲಿನ ಕಪ್ಪು ಹಣವನ್ನು ಮರಳಿ ಸ್ವದೇಶಕ್ಕೆ ತರುವುದಾಗಿ ಮೋದಿ ಭರವಸೆ ನೀಡಿದ್ದರು. ಅದು ಈವರೆಗೆ ಸಾಧ್ಯವಾಗಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ.
ವಿರಾಟ್ ಹಿಂದೂಸ್ತಾನ್ ಸಂಗಮ್ (ವಿಎಚ್ಎಸ್) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಅವರು ಕಾಂಗ್ರೆಸ್ ರಾಹುಲ್ ಗಾಂಧಿಯವರ ಪೌರತ್ವ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದರು.
‘ಸುಬ್ರಮಣಿಯನ್ ಸ್ವಾಮಿ ಅವರು ರಾಹುಲ್ ಗಾಂಧಿ ಅವರ ಪೌರತ್ವದ ಬಗ್ಗೆ ಕ್ರಮ ಕೈಗೊಳ್ಳುವಂತೆ ಕೋರಿ 2015ರಿಂದ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಇದು ಈಗ ನ್ಯಾಯಾಲಯದಲ್ಲಿದೆ. ಮೋದಿ ಅವರು ರಾಹುಲ್ ಅವರನ್ನು ರಕ್ಷಿಸುತ್ತಿದ್ದಾರೆ’ ಎಂದು ಪೋಸ್ಟ್ನಲ್ಲಿ ಶೆಟ್ಟಿ ಬರೆದುಕೊಂಡಿದ್ದರು.
ಜಗದೀಶ್ ಶೆಟ್ಟಿ ಪೋಸ್ಟ್ಗೆ ಪ್ರತಿಕ್ರಿಯಿಸಿರುವ ಸ್ವಾಮಿ, ಪ್ರಧಾನಿ ಮೋದಿ ವಿರುದ್ಧ ಬೇಸರ ಹೊರಹಾಕಿದ್ದಾರೆ.
‘ಭಾರತ–ಚೀನಾ ಗಡಿ ವಿವಾದದ ಬಗ್ಗೆ ಸುಳ್ಳು ಹೇಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ದೇಶದ್ರೋಹಕ್ಕೆ ಗುರಿಯಾಗುತ್ತಾರೆ’ ಎಂದು ಸುಬ್ರಮಣಿಯನ್ ಸ್ವಾಮಿ ಈಚೆಗೆ ಕಿಡಿಕಾರಿದ್ದರು.
ಈ ಕುರಿತಂತೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದ ಅವರು, ‘2020ರ ಏಪ್ರಿಲ್ನಿಂದ ಚೀನಾ 4,046 ಚದರ ಕಿಲೋ ಮೀಟರ್ ವಿವಾದಿತ ಲಡಾಖ್ ಪ್ರದೇಶವನ್ನು ವಶಪಡಿಸಿಕೊಂಡಿದೆ. ಆದರೆ, ಈ ಜೋಡಿ ಮಾತ್ರ ‘ಯಾರೂ ಬಂದಿಲ್ಲ’ ಎಂಬ ಸುಳ್ಳನ್ನೇ ಹೇಳಿಕೊಂಡು ಬಂದಿದೆ. ಭಾರತ–ಚೀನಾ ಗಡಿ ವಿವಾದ ಸಂಬಂಧ ಸತ್ಯ ಹೊರಬಿದ್ದರೆ ತಾವು ದೇಶದ್ರೋಹ ಆರೋಪಕ್ಕೆ ಗುರಿಯಾಗುತ್ತೇವೆ ಎಂಬುದು ಅವರಿಗೆ (ಮೋದಿ ಮತ್ತು ಅಮಿತ್ ಶಾ) ತಿಳಿದಿರಲಿ’ ಎಂದು ಗುಡುಗಿದ್ದರು.
ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆಯಾಗಿದೆ ಎಂಬ ಆರೋಪದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಕೆಲವು ದಿನಗಳ ಹಿಂದೆ ಸುಪ್ರೀಂ ಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಲಡ್ಡುಗಳನ್ನು ತಯಾರಿಸಲು ಬಳಸುವ ತುಪ್ಪದ ಮೂಲ ಮತ್ತು ಮಾದರಿಯ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸಲು ಆಂಧ್ರಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡುವಂತೆಯೂ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.