ADVERTISEMENT

ಲೋಕಸಭೆಯಲ್ಲಿ ಮಾಯಾವತಿ ನಮ್ಮ ಜೊತೆಗೂಡಲಿದ್ದಾರೆ: ರಾಹುಲ್ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2018, 10:32 IST
Last Updated 5 ಅಕ್ಟೋಬರ್ 2018, 10:32 IST
   

ನವದೆಹಲಿ: 2019ರ ಲೋಕಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ವಿಶ್ವಾಸ ಹೊಂದಿರುವುದಾಗಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ.

ಹಿಂದೂಸ್ತಾನ್‌ ಟೈಮ್ಸ್‌ ಪತ್ರಿಕೆ ಆಯೋಜಿಸಿದ್ದ ನಾಯಕತ್ವ ಶಿಬಿರದಲ್ಲಿಭಾಗವಹಿಸಿ ರಾಹುಲ್ ಗಾಂಧಿ ಮಾತನಾಡಿದರು. ರಾಜ್ಯಗಳ ವಿಧಾನಸಭಾ ಚುನಾವಣೆಯೇ ಬೇರೆ, ಲೋಕಸಭೆ ಚುನಾವಣೆಯೇ ಬೇರೆ 2019ರಲ್ಲಿ ಮಾಯಾವತಿ ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಳ್ಳಲಿದ್ದಾರೆ ಎಂಬ ವಿಶ್ವಾಸವಿದೆ. ಈಗಾಗಲೇ ಅವರು ಲೋಕಸಭೆಯಲ್ಲಿ ಜೊತೆಗೂಡುವ ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ಎರಡು ದಿನಗಳ ಹಿಂದೆ ಮಾಯಾವತಿ ರಾಜಸ್ಥಾನ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದರು. ಅಲ್ಲದೇ ಕಾಂಗ್ರೆಸ್ ಪಕ್ಷದ ನಾಯಕರು ಗರ್ವದಿಂದ ವರ್ತಿಸುತ್ತಿದ್ದು ಸ್ಥಾನ ಹೊಂದಾಣಿಕೆ ವಿಚಾರದಲ್ಲಿ ಉದಾರತೆ ತೋರಲಿಲ್ಲ. ಮಧ್ಯಪ್ರದೇಶ ರಾಜ್ಯದಲ್ಲಿ ಮೈತ್ರಿ ಮುರಿದು ಬೀಳಲು ದಿಗ್ವಿಜಯ ಸಿಂಗ್‌ ಅವರೇ ಕಾರಣಎಂದು ಮಾಯಾವತಿ ದೂರಿದ್ದರು.

ADVERTISEMENT

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿಕಾಂಗ್ರೆಸ್‌ ಪಕ್ಷ ಉತ್ತಮ ಸ್ಥಿತಿಯಲ್ಲಿದೆ, ಆ ರಾಜ್ಯಗಳ ಸ್ಥಳೀಯ ನಾಯಕರು ಗೆಲ್ಲುವ ವಿಶ್ವಾಸದಲ್ಲಿದ್ದಾರೆ ಎಂದು ರಾಹುಲ್‌ ಹೇಳಿದರು.

ಮಧ್ಯಪ್ರದೇಶದಲ್ಲಿ 50 ಸ್ಥಾನಗಳು, ಛತ್ತೀಸಗಢದಲ್ಲಿ 15 ಸ್ಥಾನಗಳಿಗೆ ಬಿಎಸ್‌ಪಿ ಬೇಡಿಕೆ ಸಲ್ಲಿಸಿತ್ತು. ಕಾಂಗ್ರೆಸ್‌ ಮಧ್ಯಪ್ರದೇಶದಲ್ಲಿ 22, ಛತ್ತೀಸಗಢದಲ್ಲಿ 9 ಸ್ಥಾನಗಳನ್ನು ಬಿಟ್ಟುಕೊಡಲು ಸಿದ್ಧವಿತ್ತು. ರಾಜಸ್ಥಾನದಲ್ಲಿ ಸ್ಥಳೀಯ ಕಾಂಗ್ರೆಸ್‌ ನಾಯಕರು ಬಿಎಸ್‌ಪಿ ಜೊತೆಗಿನ ಮೈತ್ರಿಯನ್ನು ವಿರೋಧಿಸಿದ್ದರು ಎಂದು ರಾಹುಲ್‌ ಹೇಳಿದರು.

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಢ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಬಿಎಸ್‌ಪಿ ಮೈತ್ರಿ ಇಲ್ಲದಿದ್ದರೂ ಈ ರಾಜ್ಯಗಳಲ್ಲಿ ಗೆಲ್ಲುವ ವಿಶ್ವಾಸ ನಮಗಿದೆ. ಕರ್ನಾಟಕ ಸೇರಿದಂತೆ ಇನ್ನು ಎರಡು ರಾಜ್ಯಗಳಲ್ಲಿ ಚುನಾವಣೆ ಮೈತ್ರಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ರಾಹುಲ್‌ ಗಾಂಧಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.