ADVERTISEMENT

ಪ್ರತಿಮೆ ನಿರ್ಮಾಣ ಸಮರ್ಥಿಸಿದ ಮಾಯಾವತಿ

ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಕೆ

ಪಿಟಿಐ
Published 2 ಏಪ್ರಿಲ್ 2019, 12:28 IST
Last Updated 2 ಏಪ್ರಿಲ್ 2019, 12:28 IST
   

ನವದೆಹಲಿ: ಉತ್ತರ ಪ್ರದೇಶದಲ್ಲಿ ತನ್ನ ಪ್ರತಿಮೆ ನಿರ್ಮಾಣವನ್ನು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡಿದ್ದಾರೆ.

ಮಂಗಳವಾರ ಅಫಿಡವಿಟ್ ಸಲ್ಲಿಸಿರುವ ಅವರು, ‘ನನ್ನ ಹಾಗೂ ಪಕ್ಷದ ಇತರೆ ನಾಯಕರ ಪ್ರತಿಮೆಗಳನ್ನು ನಿರ್ಮಿಸುವುದರ ಉದ್ದೇಶ ಸಂತರು, ಗುರುಗಳು ಹಾಗೂ ಸಮಾಜ ಸುಧಾರಕರ ಮೌಲ್ಯಗಳನ್ನು ಪ್ರಚಾರ ಮಾಡುವುದಾಗಿದೆ. ಬಿಎಸ್‌ಪಿ ಚಿಹ್ನೆಯನ್ನು ವೈಭವೀಕರಿಸುವ ಉದ್ದೇಶವಿಲ್ಲ’ ಎಂದು ಹೇಳಿದ್ದಾರೆ.

‘ಜನರ ಇಚ್ಛೆಯಂತೆ ನನ್ನ ಪ್ರತಿಮೆಗಳನ್ನು ನಿರ್ಮಿಸಲಾಗಿದೆ. ಸ್ಮಾರಕಗಳು ಮತ್ತು ಪ್ರತಿಮೆಗಳ ನಿರ್ಮಾಣಕ್ಕೆ ವಿಧಾನಸಭೆಯಲ್ಲಿ ಅನುಮತಿ ಪಡೆದ ಬಳಿಕ ಬಜೆಟ್‌ನಲ್ಲಿ ಅನುದಾನ ಬಿಡುಗಡೆ ಮಾಡಲಾಗಿತ್ತು’ ಎಂದು ಅವರು ಹೇಳಿದ್ದಾರೆ.

ADVERTISEMENT

‘ಸ್ಮಾರಕ, ಪ್ರತಿಮೆಗಳ ನಿರ್ಮಾಣಕ್ಕೆ ಸಾರ್ವಜನಿಕ ಹಣ ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ರಾಜಕೀಯ ಪ್ರೇರಿತವಾದದ್ದು. ಈ ಅರ್ಜಿ ವಜಾಗೊಳಿಸಬೇಕು’ ಎಂದು ಮಾಯಾವತಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

2008–10ರ ಅವಧಿಯಲ್ಲಿ ಮಾಯಾವತಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಆಗಿದ್ದಾಗ, ರಾಜ್ಯದ ವಿವಿಧೆಡೆಗಳಲ್ಲಿ ಪ್ರತಿಮೆಗಳನ್ನು ನಿರ್ಮಿಸಲು ಬಜೆಟ್‌ನಿಂದ ₹2,000 ಕೋಟಿ ಬಳಸಲಾಗಿದೆ ಎಂದು ಆರೋಪಿಸಿ ವಕೀಲರೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.