ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಹಾಗೂ ಅವರ ಚಿಕ್ಕಪ್ಪ ಶಿವಪಾಲ್ ಯಾದವ್ ನಡುವೆ ಮತ್ತೆ ಒಡಕು ಮೂಡಿದ್ದು, ಶಿವಪಾಲ್ ಅವರು ಬಿಜೆಪಿ ಜೊತೆ ಕೈಜೋಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಶಿವಪಾಲ್ ಅವರು ಮುಖ್ಯಮಂತ್ರಿ ಆದಿತ್ಯನಾಥ ಅವರನ್ನು ಬುಧವಾರ ಭೇಟಿ ಮಾಡಿ ಅರ್ಧತಾಸು ಚರ್ಚಿಸಿರುವುದು ಈ ಊಹಾಪೋಹಕ್ಕೆ ಕಾರಣ. ವಿಧಾನಸಭೆಯಲ್ಲಿ ಎಸ್ಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅಖಿಲೇಶ್ ಅವರನ್ನು ಆಯ್ಕೆ ಮಾಡಲಾದ ಸಭೆಗೆ ಶಿವಪಾಲ್ ಅವರಿಗೆ ಆಹ್ವಾನವಿರಲಿಲ್ಲ. ಈ ಬಗ್ಗೆ ಎಸ್ಪಿ ವರಿಷ್ಠ ಮುಲಾಯಂ ಸಿಂಗ್ ಅವರಿಗೆ ದೂರು ನೀಡಿದ್ದ ಶಿವಪಾಲ್, ದೆಹಲಿಯಲ್ಲಿ ಬಿಜೆಪಿ ಹಿರಿಯ ಮುಖಂ
ಡರನ್ನು ಭೇಟಿ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಸೇರುವ ಕುರಿತು ಕೇಳಿದ ಪ್ರಶ್ನೆಗೆ ನೇರವಾಗಿ ಉತ್ತರಿಸದ ಶಿವಪಾಲ್, ಸದ್ಯದಲ್ಲೇ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು.
ಜಸ್ವಂತ್ ನಗರ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿರುವ ಶಿವಪಾಲ್ ಅವರನ್ನು ಬಿಜೆಪಿ ರಾಜ್ಯಸಭೆಗೆ ಕಳುಹಿಸುವ ಸಾಧ್ಯತೆಯಿದ್ದು, ಅವರ ಪುತ್ರ ಆದಿತ್ಯ ಯಾದವ್ ಅವರನ್ನು ಜಸ್ವಂತ್ ನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸಾಧ್ಯತೆಯಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.