
ಫರೀದಾಬಾದ್: ಚಲಿಸುವ ವ್ಯಾನ್ನಲ್ಲಿ 25 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಬಳಿಕ ಆಕೆಯನ್ನು ರಸ್ತೆಗೆ ಎಸೆದ ಘಟನೆ ಗುರುಗ್ರಾಮ–ಫರೀದಾಬಾದ್ನಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಸಂತ್ರಸ್ತೆಯ ಮುಖ ಮತ್ತು ತಲೆಗೆ ಗಂಭೀರ ಗಾಯಗಳಾಗಿವೆ. ಆಕೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೇಳಿಕೆ ನೀಡಲೂ ಆಕೆಗೆ ಸಾಧ್ಯವಾಗುತ್ತಿಲ್ಲ’ ಎಂದು ತಿಳಿಸಿದ್ದಾರೆ.
ಮೂವರು ಮಕ್ಕಳ ತಾಯಿಯ ಮೇಲಿನ ಅತ್ಯಾಚಾರ ಕೃತ್ಯವು 13 ವರ್ಷಗಳ ಹಿಂದೆ ಡಿಸೆಂಬರ್ನಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸಿದೆ. ಆರೋಪಿಗಳು ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದವರಾಗಿದ್ದು, ಫರೀದಾಬಾದ್ನಲ್ಲಿ ನೆಲಸಿದ್ದರು. ಇಬ್ಬರನ್ನೂ ಇಲ್ಲಿನ ಕೋರ್ಟ್ ಎದುರು ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ ಎಂದು ಅಧಿಕಾರಿಗಳು ತಿಳಿಸಿದರು.
‘ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯು ಪ್ರಗತಿಯಲ್ಲಿದೆ’ ಎಂದು ಫರೀದಾಬಾದ್ ಪೊಲೀಸ್ ವಕ್ತಾರ ಯಶ್ಪಾಲ್ ಯಾದವ್ ಹೇಳಿದರು.
ಸಂತ್ರಸ್ತೆಯ ಸಹೋದರಿ ದಾಖಲಿಸಿರುವ ದೂರಿನಲ್ಲಿ, ‘ದಾಂಪತ್ಯ ಜೀವನದಲ್ಲಿ ಬಿರುಕು ಬಿಟ್ಟಿದ್ದ ಕಾರಣ ಸಂತ್ರಸ್ತೆಯು ತಮ್ಮ ಪೋಷಕರ ನಿವಾಸದಲ್ಲಿದ್ದರು. ಸೋಮವಾರ ಸಂಜೆ ಸೆಕ್ಟರ್ 23ರಲ್ಲಿರುವ ಸ್ನೇಹಿತರ ಮನೆಗೆ ತೆರಳಿದ್ದರು. ಅಲ್ಲಿಂದ ವಾಪಸ್ ಬರುವಾಗ ತಡರಾತ್ರಿಯಾಗಿತ್ತು’ ಎಂದು ತಿಳಿಸಿದ್ದಾರೆ.
ಬಿಜೆಪಿ ಆಡಳಿತವಿರುವ ಹರಿಯಾಣದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಭೀಕರ ಘಟನೆಯು ಬಹಿರಂಗಪಡಿಸಿದೆ. ಇದು ರಾಜ್ಯದಲ್ಲಿ ಮಹಿಳಾ ಸುರಕ್ಷತೆ ಕುರಿತ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆರಾವ್ ನರೇಂದ್ರ ಸಿಂಗ್ ಕಾಂಗ್ರೆಸ್ ಅಧ್ಯಕ್ಷ
‘ಮಹಿಳೆ ಮನೆ ಸೇರಲು ವಾಹನಕ್ಕಾಗಿ ಕಾಯುತ್ತಿದ್ದಾಗ ವ್ಯಾನ್ನಲ್ಲಿ ಬಂದ ಆರೋಪಿಗಳು ಡ್ರಾಪ್ ನೀಡುವುದಾಗಿ ತಿಳಿಸಿದ್ದಾರೆ. ಬಳಿಕ ಅವರು ಆಕೆಯನ್ನು ಗುರುಗ್ರಾಮದ ಕಡೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ರಾತ್ರಿ ಇಡೀ ಆಕೆಯನ್ನು ವಾಹನದಲ್ಲಿ ಸುತ್ತಿಸಿ ಮುಂಜಾನೆ ಮೂರು ಗಂಟೆ ಸುಮಾರಿಗೆ ವ್ಯಾನ್ ಗಂಟೆಗೆ 90 ಕಿ.ಮೀ ವೇಗದಲ್ಲಿ ಸಾಗುತ್ತಿರುವಾಗಲೇ ಆಕೆಯನ್ನು ರಾಜಾ ಚೌಕ್ ಬಳಿ ರಸ್ತೆಗೆ ಎಸೆದು ಪರಾರಿಯಾಗಿದ್ದಾರೆ’ ಎಂದು ಪೊಲೀಸರು ಹೇಳಿದರು. ರಕ್ತ ಸುರಿಯುತ್ತಿದ್ದರೂ ಮಹಿಳೆ ಹೇಗೋ ತಮ್ಮ ಸಹೋದರಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಸ್ಥಳಕ್ಕೆ ಧಾವಿಸಿದ ಸಹೋದರಿ ಅವರನ್ನು ಬಾದಶಾಹ್ ಖಾನ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಸಂತ್ರಸ್ತೆಯನ್ನು ದೆಹಲಿಗೆ ಕರೆದೊಯ್ಯಲು ವೈದ್ಯರು ಸಲಹೆ ನೀಡಿದ್ದರು. ಆದರೆ ಸಂತ್ರಸ್ತೆಯ ಕುಟುಂಬಸ್ಥರು ಫರೀದಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿಸಿದರು. ‘ಶಸ್ತ್ರಚಿಕಿತ್ಸೆಗೆ ಸಿದ್ಧತೆ ನಡೆಯುತ್ತಿದೆ. ಮಹಿಳೆಯು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆಗೆ ಎಸೆದಾಗ ಬಲವಾದ ಪೆಟ್ಟು ಬಿದ್ದಂತಿದೆ’ ಎಂದು ಖಾಸಗಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.