ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಹರಿಹಾಯ್ದಿರುವಕಾಂಗ್ರೆಸ್ ನಾಯಕಿ ಪ್ರಿಯಾಂಕ ವಾದ್ರಾ, ‘ರಾಜ್ಯದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯ ಭದ್ರತೆಯಿಲ್ಲ‘ ಎಂದು ದೂರಿದ್ದಾರೆ.
‘ಹತ್ರಾಸ್ನಲ್ಲಿ ರಾಕ್ಷಸಿ ವರ್ತನೆಗೆ ಬಲಿಯಾದ ದಲಿತ ಹುಡುಗಿ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಎರಡು ವಾರಗಳಿಂದ ಆಕೆ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದರು. ಈ ಮಹಿಳೆಯ ಕೊಲೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು‘ ಎಂದು ಒತ್ತಾಯಿಸಿದ್ದಾರೆ.
‘ಹತ್ರಾಸ್, ಶಹಜಹಾನ್ಪುರ ಮತ್ತು ಗೋರಖ್ಪುರಗಳಲ್ಲಿ ಒಂದರ ನಂತರ ಒಂದರಂತೆ ಅತ್ಯಾಚಾರದ ಘಟನೆಗಳು ನಡೆಯುತ್ತಿದ್ದು, ಈ ಘಟನೆಗಳು ರಾಜ್ಯವನ್ನೇ ಬೆಚ್ಚಿಬೀಳಿಸಿವೆ‘ ಎಂದು ದೂರಿದ ಪ್ರಿಯಾಂಕ ವಾದ್ರಾ, ‘ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮಹಿಳೆಯರಿಗೆ ಸುರಕ್ಷತೆ ಇಲ್ಲ. ಅಪರಾಧಿಗಳು ಬಹಿರಂಗವಾಗಿ ಅಪರಾಧಗಳನ್ನು ಮಾಡುತ್ತಿದ್ದಾರೆ‘ ಎಂದು ಆರೋಪಿಸಿದ್ದಾರೆ. ‘ರಾಜ್ಯದ ಮಹಿಳೆಯರ ಸುರಕ್ಷತೆ ನಿಮ್ಮ ಜವಾಬ್ದಾರಿ‘ ಎಂದು ಟ್ವೀಟ್ ಮಾಡಿದ್ದಾರೆ.
ಸೆ.14ರಂದು ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ದಲಿತ ಮಹಿಳೆ ಮೇಲೆ ನಾಲ್ವರು ಸಾಮೂಹಿಕ ಅತ್ಯಚಾರವೆಸಗಿದ್ದರು. ಘಟನೆಯಲ್ಲಿ ಸಂತ್ರಸ್ಥಳಾದವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.