ಅಮರಾವತಿ: ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ವೈಎಸ್ಆರ್ ಕಾಂಗ್ರೆಸ್ ಸ್ಪರ್ಧಿಸುವುದಿಲ್ಲ. 2019ರಲ್ಲಿ ಆಂಧ್ರದಲ್ಲಿ ನಡೆಯುವ ಚುನಾವಣೆಯತ್ತ ಸಂಪೂರ್ಣ ಗಮನ ಕೇಂದ್ರೀಕರಿಸಿದ್ದೇವೆ.2024ರ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ತೆಲಂಗಾಣದಲ್ಲಿ ಪಕ್ಷದ ಸಂಘಟನೆ ಬಲಪಡಿಸಲು ಗಮನ ಕೊಡಲಾಗುವುದು ಎಂದು ಪಕ್ಷದ ನಾಯಕ ಜಗನ್ಮೋಹನ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
2014ರರಲ್ಲಿ ನಡೆದಿದ್ದ ಚುನಾವಣೆಗಳಲ್ಲಿ ವೈಎಸ್ಆರ್ ಕಾಂಗ್ರೆಸ್ ಮೂರು ವಿಧಾನಸಭೆ ಮತ್ತು ಒಂದು ಲೋಕಸಭೆ ಕ್ಷೇತ್ರಗಳಲ್ಲಿ ಜಯಗಳಿಸಿತ್ತು. ಅದರೆ ವಿಜೇತರು ನಂತರದ ದಿನಗಳಲ್ಲಿ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿಯೊಂದಿಗೆ ಕೈಜೋಡಿಸಿದ್ದರು.
ನಮ್ಮ ಗಮನ ಸಂಪೂರ್ಣವಾಗಿ ಆಂಧ್ರ ಪ್ರದೇಶದಲ್ಲಿ 2019ರಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯತ್ತ ಇದೆ. ಹೀಗಾಗಿ ತೆಲಂಗಾಣದಲ್ಲಿ ಸ್ಪರ್ಧೆಯಿಂದ ದೂರ ಉಳಿಯಲು ನಿರ್ಧರಿಸಲಾಗಿದೆ ಎಂದು ವೈಎಸ್ಆರ್ ಕಾಂಗ್ರೆಸ್ನ ಕೇಂದ್ರ ಸಮಿತಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
‘ಕಳೆದ ನಾಲ್ಕೂವರೆ ವರ್ಷಗಳಲ್ಲಿ ತೆಲಂಗಾಣದಲ್ಲಿ ಏನೆಲ್ಲಾ ಆಯಿತು ಎಂಬುದನ್ನು ಗಮನದಲ್ಲಿರಿಸಿಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದು ಕೇಂದ್ರ ಸಮಿತಿ ಹೇಳಿದೆ.
ಆಂಧ್ರದಲ್ಲಿ ಮಾಡು ಇಲ್ಲವೇ ಮಡಿ ರಾಜಕೀಯ ಹೋರಾಟ ನಡೆಸುತ್ತಿರುವ ವೈಎಸ್ಆರ್ ಕಾಂಗ್ರೆಸ್ಗೆ 2019ರ ಸಾರ್ವರ್ತಿಕ ಚುನಾವಣೆಗಳಲ್ಲಿ ಜಯಗಳಿಸುವುದು ಭವಿಷ್ಯದ ದೃಷ್ಟಿಯಿಂದ ಅನಿವಾರ್ಯ. ಹೀಗಾಗಿಯೇ ತನ್ನೆಲ್ಲ ಬಲವನ್ನು ಅದು ಆಂಧ್ರದಲ್ಲಿ ಕೇಂದ್ರೀಕರಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.