ADVERTISEMENT

ಗುಜರಾತ್‌ ಗಲಭೆ: ಝಕಿಯಾ ಅರ್ಜಿ ಮಂದೂಡಿದ ಸುಪ್ರೀಂ ಕೋರ್ಟ್‌

ಪ್ರಧಾನಿ ನರೇಂದ್ರ ಮೋದಿ ಆರೋಪ ಮುಕ್ತಗೊಳಿಸಿದ್ದ ಎಸ್‌ಐಟಿ ಕ್ರಮಕ್ಕೆ ಆಕ್ಷೇಪ

ಪಿಟಿಐ
Published 3 ಡಿಸೆಂಬರ್ 2018, 17:38 IST
Last Updated 3 ಡಿಸೆಂಬರ್ 2018, 17:38 IST

ನವದೆಹಲಿ: ಗುಜರಾತ್‌ನಲ್ಲಿ 2002ರಲ್ಲಿ ನಡೆದ ಗೋಧ್ರಾ ಗಲಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶೇಷ ತನಿಖಾದಳ (ಎಸ್‌ಐಟಿ) ಆರೋಪ ಮುಕ್ತಗೊಳಿಸಿದ್ದನ್ನು ಪ್ರಶ್ನಿಸಿ ಝಕಿಯಾ ಜಾಫ್ರಿ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನವರಿ ಮೂರನೇ ವಾರಕ್ಕೆ ಸುಪ್ರೀಂ ಕೋರ್ಟ್‌ ಮುಂದೂಡಿದೆ.

ಗೋಧ್ರಾ ಘಟನೆ ನಂತರ ಅಹಮದಾಬಾದ್‌ನ ಗುಲಬರ್ಗ್‌ ಸೊಸೈಟಿಯಲ್ಲಿ ನಡೆದ ಗಲಭೆಯಲ್ಲಿ ಹತ್ಯೆಯಾದ ಮಾಜಿ ಸಂಸದ ಎಹ್ಸಾನ್‌ ಜಾಫ್ರಿ ಅವರ ಪತ್ನಿ ಝಕಿಯಾ, ಎಸ್‌ಐಟಿ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್‌ ಹೈಕೋರ್ಟ್‌ 2017ರ ಅಕ್ಟೋಬರ್‌ 5ರಂದು ವಜಾ ಮಾಡಿತ್ತು. ಅದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್‌ ಮತ್ತು ಹೇಮಂತ ಗುಪ್ತ ಅವರಿದ್ದ ಪೀಠವು, ಅರ್ಜಿಯ ವಿಚಾರಣೆಯನ್ನು ಜನವರಿ ಮೂರನೇ ವಾರದಲ್ಲಿ ನಡೆಸುವುದಾಗಿ ತಿಳಿಸಿತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ ಸಲ್ಲಿಸಿರುವ ಅರ್ಜಿಯನ್ನು ಎರಡನೇ ಅರ್ಜಿಯನ್ನಾಗಿ ಪರಿಗಣಿಸಿ ವಿಚಾರಣೆ ನಡೆಸುವುದಾಗಿ ಪೀಠ ತಿಳಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.