
ಗುವಾಹಟಿ: ಜನಪ್ರಿಯ ಗಾಯಕ ಜುಬೀನ್ ಗರ್ಗ್ ಅವರ ಸಾವಿನ ಪ್ರಕರಣದ ವಿಚಾರಣೆಯನ್ನು ತ್ವರಿತ ನ್ಯಾಯಾಲಯಕ್ಕೆ ನೀಡುವಂತೆ ಗುವಾಹಟಿ ಹೈಕೋರ್ಟ್ಗೆ ವಿನಂತಿಸಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಗುರುವಾರ ಹೇಳಿದರು.
‘ಗರ್ಗ್ ಅವರ ಕುಟುಂಬದ ವಿನಂತಿಯ ಮೇರೆಗೆ ಸಚಿವ ಸಂಪುಟವು ಈ ನಿರ್ಧಾರ ಕೈಗೊಂಡಿದೆ’ ಎಂದು ಹೇಳಿದರು.
ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಗರ್ಗ್ ಪತ್ನಿ ಗರಿಮಾ ಸೈಕಿಯಾ ‘ಜುಬೀನ್ ಅವರ ಕುಟುಂಬ, ಸ್ನೇಹಿತರು ಹಾಗೂ ಅಭಿಮಾನಿಗಳು ಅವರ ಸಾವಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆಯನ್ನು ಬಯಸುತ್ತಿದ್ದಾರೆ. ನ್ಯಾಯಾಧೀಶರು ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸುತ್ತಾರೆ ಎಂದು ಭಾವಿಸಿದ್ದೇವೆ’ ಎಂದು ಹೇಳಿದರು.
ಪ್ರಕರಣದ ತನಿಖೆ ನಡೆಸುತ್ತಿರುವ ಅಸ್ಸಾಂ ಪೊಲೀಸರ ವಿಶೇಷ ತನಿಖಾ ತಂಡವು, ಸ್ಥಳೀಯ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ. ಇದರಲ್ಲಿ 7 ಮಂದಿಯನ್ನು ಆರೋಪಿಗಳು ಎಂದು ಹೆಸರಿಸಲಾಗಿದೆ.
ಮೂರು ದಿನಗಳ ‘ನಾರ್ತ್ ಈಸ್ಟ್ ಫೆಸ್ಟಿವಲ್’ ಕಾರ್ಯಕ್ರಮದ ನಾಲ್ಕನೇ ಆವೃತ್ತಿಯಲ್ಲಿ ಭಾಗವಹಿಸಲು ಜುಬೀನ್ ಸಿಂಗಪುರಕ್ಕೆ ತೆರಳಿದ್ದರು. ಅದರ ಹಿಂದಿನ ದಿನ ಲಾಜರಸ್ ದ್ವೀಪದಲ್ಲಿ ಸಮುದ್ರದಲ್ಲಿ ಸ್ಕೂಬಾ ಡೈವಿಂಗ್ ಮಾಡುತ್ತಿದ್ದ ವೇಳೆ ಕಳೆದ ಸೆ.19ರಂದು ಸಾವಿಗೀಡಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.