ಬೆಂಗಳೂರು: ಹೊಳೇನರಸೀಪುರ ಕ್ಷೇತ್ರದಿಂದ ಕಣಕ್ಕಿಳಿಯಲು ತಯಾರಿ ನಡೆಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಿ. ಮಂಜೇಗೌಡ ಸರ್ಕಾರಿ ಹುದ್ದೆಗೆ ನೀಡಿದ ರಾಜೀನಾಮೆ ಇನ್ನೂ ಅಂಗೀಕಾರ ಆಗಿಲ್ಲ.
ಸಾರಿಗೆ ಇಲಾಖೆಯಲ್ಲಿ ಹಿರಿಯ ವಾಹನ ನಿರೀಕ್ಷಕರಾಗಿರುವ ಮಂಜೇಗೌಡ, 2017ರ ನ. 3ರಂದು ಹುದ್ದೆಗೆ ರಾಜೀನಾಮೆ ನೀಡಿದ್ದರು.
‘ಆರ್ಥಿಕ ಇಲಾಖೆ ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ರಾಜೀನಾಮೆ ಸಂಬಂಧಿಸಿದ ಕಡತಕ್ಕೆ ಒಪ್ಪಿಗೆ ನೀಡಿದೆ. ಆದರೆ ಕಾನೂನು ಇಲಾಖೆ ಇನ್ನೂ ಅಭಿಪ್ರಾಯ ನೀಡಿಲ್ಲ. ಹೀಗಾಗಿ ಇನ್ನೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ’ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ ತಿಳಿಸಿದರು.
ಮಂಜೇಗೌಡ ಅವರನ್ನು ಕಣಕ್ಕಿಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆಸಕ್ತಿ ಹೊಂದಿದ್ದು, ಅವರಿಬ್ಬರ ಮಧ್ಯೆ ನಡೆದ ಮೊಬೈಲ್ ಸಂಭಾಷಣೆಯ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಮಂಜೇಗೌಡ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಲೋಕಾಯುಕ್ತ ವಿಚಾರಣೆ ಬಾಕಿ ಇದೆ. ಈ ಕಾರಣಕ್ಕೆ ರಾಜೀನಾಮೆಗೆ ಕಾನೂನು ಇಲಾಖೆ ಆಕ್ಷೇಪ ವ್ಯಕ್ತಪಡಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.