ADVERTISEMENT

ಅಂಬೇಡ್ಕರ್ ಪ್ರತಿಮೆ ಸ್ಥಳಾಂತರ ಅನಿವಾರ್ಯ

​ಪ್ರಜಾವಾಣಿ ವಾರ್ತೆ
Published 19 ಜನವರಿ 2012, 19:30 IST
Last Updated 19 ಜನವರಿ 2012, 19:30 IST

ಬೆಂಗಳೂರು: `ನಮ್ಮ ಮೆಟ್ರೊ~ ಕಾಮಗಾರಿ ಹಿನ್ನೆಲೆಯಲ್ಲಿ ವಿಧಾನಸೌಧದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯನ್ನು ಸ್ಥಳಾಂತರಿಸುವುದು ಅನಿವಾರ್ಯ ಎಂದು ಚೆನ್ನೈನ ಐ.ಐ.ಟಿ ತಜ್ಞರು ವರದಿ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಮೆಯನ್ನು ಬೇರೆ ಕಡೆ ಸ್ಥಳಾಂತರಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

ಸುರಂಗ ಕೊರೆಯುವ ವೇಳೆ ಪ್ರತಿಮೆಗೆ ಅಪಾಯ ಆಗುವ ಸಾಧ್ಯತೆ ಇದೆ. ಹೀಗಾಗಿ ಅದನ್ನು ಸ್ಥಳಾಂತರ ಮಾಡುವುದೇ ಸೂಕ್ತ ಎಂದು ಐಐಟಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು ಸರ್ಕಾರಕ್ಕೆ ನೀಡಿರುವ ವರದಿಯಲ್ಲಿ ತಿಳಿಸಿದ್ದಾರೆ. ಈ ವರದಿ ಕುರಿತು ಗುರುವಾರದ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು.

ಗುಜರಾತ್ ಪ್ರವಾಸದಲ್ಲಿರುವ ಸಮಾಜ ಕಲ್ಯಾಣ ಸಚಿವ ನಾರಾಯಣಸ್ವಾಮಿ ಈ ಸಭೆಯಲ್ಲಿ ಹಾಜರಿರಲಿಲ್ಲ. ಹೀಗಾಗಿ ಪ್ರತಿಮೆ ಸ್ಥಳಾಂತರ ಕುರಿತು ಸಂಬಂಧಪಟ್ಟ ಸಚಿವರ ಜತೆ ಚರ್ಚೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಮುಖ್ಯಮಂತ್ರಿಗೆ ನೀಡಲಾಯಿತು.

ಶಾಸಕರು, ಮುಖಂಡರ ಜತೆ ಚರ್ಚೆ: ಪ್ರತಿಮೆ ಸ್ಥಳಾಂತರ ಕುರಿತು ಪರಿಶಿಷ್ಟ ಜಾತಿ/ಪಂಗಡದ ಶಾಸಕರು ಮತ್ತು ದಲಿತ ಸಂಘರ್ಷ ಸಮಿತಿಯ ಮುಖಂಡರ ಸಭೆ ಕರೆದು ಚರ್ಚಿಸಿದ ನಂತರ ಸ್ಥಳಾಂತರಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಸಚಿವ ನಾರಾಯಣಸ್ವಾಮಿ `ಪ್ರಜಾವಾಣಿ~ಗೆ ತಿಳಿಸಿದರು.

`ಬಜೆಟ್ ನಂತರ ಈ ಸಭೆ ಕರೆಯಲಾಗುವುದು. ಐಐಟಿ ಕೊಟ್ಟಿರುವ ವರದಿ ಬಗ್ಗೆ ಎಲ್ಲ ಮುಖಂಡರಿಗೂ ವಿವರಿಸಿ, ವಿಶ್ವಾಸಕ್ಕೆ ತೆಗೆದುಕೊಂಡು ಸ್ವಲ್ಪ ದೂರಕ್ಕೆ ಪ್ರತಿಮೆ ಸ್ಥಳಾಂತರ ಮಾಡಲಾಗುವುದು. ಈ ಹಿಂದೆ ನಿರ್ಧರಿಸಿದಂತೆ ವಿಧಾನಸೌಧದ ಹಿಂಭಾಗಕ್ಕೆ ಸ್ಥಳಾಂತರ ಮಾಡುವುದಿಲ್ಲ~ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.