ADVERTISEMENT

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ; ಆಕ್ರೋಶ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2017, 19:30 IST
Last Updated 10 ಅಕ್ಟೋಬರ್ 2017, 19:30 IST

ನಂಜನಗೂಡು: ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಬಳಿದು ಅವಮಾನ ಮಾಡಲಾಗಿರುವ ಘಟನೆ ಇಲ್ಲಿ ನಡೆದಿದ್ದು, ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನೆಲೆಸಿದೆ.

‘ದಲಿತರ ಜತೆ ಉಪ್ಪಾರ ಹಾಗೂ ಕುರುಬ ಸಮುದಾಯಕ್ಕೆ ಸೇರಿದ ಕೆಲವರು ಸೋಮವಾರ ರಾತ್ರಿ ಚರಂಡಿ ವಿಚಾರವಾಗಿ ಜಗಳ ನಡೆಸಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದರು. ರಾತ್ರಿ ವೇಳೆ ಗ್ರಾಮದಲ್ಲಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಆದರೆ, ಪೊಲೀಸರು ಗ್ರಾಮದಲ್ಲಿ ಇರದೇ  ಪಟ್ಟಣಕ್ಕೆ ತೆರಳಿದ್ದರು. ಇದರಿಂದಾಗಿಯೇ ಘಟನೆ ನಡೆದಿದೆ’ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.

ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾದರು. ವಿಷಯ ತಿಳಿದು ಸ್ಥಳಕ್ಕೆ ಬಂದ ತಹಶೀಲ್ದಾರ್ ಎಂ.ದಯಾನಂದ್, ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿ, ಪರಿಸ್ಥಿತಿಯನ್ನು ತಿಳಿಗೊಳಿಸಿದರು. ರಾತ್ರಿ ವೇಳೆ ಗ್ರಾಮದಲ್ಲಿ ಉಳಿಯದ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಎಸ್ಪಿ ಸುಜೀತ ಭರವಸೆ ನೀಡಿದರು.

ADVERTISEMENT

ಘಟನೆಗೆ ಸಂಬಂಧಿಸಿದಂತೆ ರಾಮು, ನಾಗರಾಜು, ಕುಮಾರ್, ನವೀನ್, ಮಹದೇವ ಅವರ ಮೇಲೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾರಾಯಣ ಎಂಬುವರು ದೂರು ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.