ಚಿತ್ರದುರ್ಗ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಅಕಾಡೆಮಿಗಳ ಅಧ್ಯಕ್ಷರು ಹಾಗೂ ಸದಸ್ಯರು ನಿಗದಿತ ಅವಧಿ ಪೂರ್ಣಗೊಳಿಸಲು ಸರ್ಕಾರ ಅವಕಾಶ ನೀಡಬೇಕು ಎಂದು ನಟ ‘ಮುಖ್ಯಮಂತ್ರಿ’ ಚಂದ್ರು ಒತ್ತಾಯಿಸಿದರು.
‘ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕುವೆಂಪು ಭಾಷಾ ಭಾರತಿ ಸೇರಿ ಇತರ ಅಕಾಡೆಮಿಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿವೆ. ಸರ್ಕಾರ ಬದಲಾದ ಬಳಿಕ ಅಕಾಡೆಮಿ ಅಧ್ಯಕ್ಷರು ಹಾಗೂ ಸದಸ್ಯರನ್ನು ಬದಲಾಯಿಸುವ ಪರಿಪಾಠ ಒಳ್ಳೆಯದಲ್ಲ. ಇದು ಈ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಮಾಡುವ ಅವಮಾನ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅಭಿಪ್ರಾಯಪಟ್ಟರು.
‘ಅವಧಿಗೂ ಮುನ್ನಅಕಾಡೆಮಿ ಅಧ್ಯಕ್ಷರನ್ನು ಬದಲಾಯಿಸಲು ಅವಕಾಶವಿಲ್ಲದಂತೆ ಕಾನೂನು ರೂಪಿಸಬೇಕಿದೆ. ಪೂರ್ಣ ಅವಧಿ ಕಾರ್ಯನಿರ್ವಹಿಸಿದರೆ ಅಭಿವೃದ್ಧಿ ಕಾಣಲು ಸಾಧ್ಯ. ಸಾಮಾನ್ಯವಾಗಿ ಇಂತಹ ಹುದ್ದೆಗಳಲ್ಲಿ ಸಾಹಿತಿಗಳು, ವಿಚಾರವಂತರೇ ಇರುತ್ತಾರೆ. ಇವರನ್ನು ಏಕಾಏಕಿ ತೆಗೆದು ಹಾಕುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.