ADVERTISEMENT

ಅಕ್ರಮ ಕಟ್ಟಡ: ಸರ್ವೆ ಕಾರ್ಯ ಪ್ರಾರಂಭ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2011, 19:30 IST
Last Updated 7 ಸೆಪ್ಟೆಂಬರ್ 2011, 19:30 IST
ಅಕ್ರಮ ಕಟ್ಟಡ: ಸರ್ವೆ ಕಾರ್ಯ ಪ್ರಾರಂಭ
ಅಕ್ರಮ ಕಟ್ಟಡ: ಸರ್ವೆ ಕಾರ್ಯ ಪ್ರಾರಂಭ   

ಹೊಸಪೇಟೆ: ಐತಿಹಾಸಿಕ ಹಂಪಿಯ ವಿರೂಪಾಕ್ಷೇಶ್ವರ ದೇವಾಲಯದ ಸುತ್ತಲೂ ನಿರ್ಮಾಣವಾಗಿರುವ ಅಕ್ರಮ ಕಟ್ಟಡಗಳನ್ನು ಸಮೀಕ್ಷಾ ಕಾರ್ಯವನ್ನು ಭಾರತೀಯ ಸರ್ವೇಕ್ಷಣಾ ಇಲಾಖೆ ಅಧಿಕಾರಿಗಳ ತಂಡ ಬುಧವಾರ ಬೆಳಿಗ್ಗೆ ಆರಂಭಿಸಿತು.

ಹೈಕೋರ್ಟ್ ನಿರ್ದೇಶನದಂತೆ ಈ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ. ಹಂಪಿಯಲ್ಲಿ ನಿರ್ಮಾಣವಾಗಿರುವ ಅನಧಿಕೃತ ಕಟ್ಟಡಗಳ ಸರ್ವೆ ಕಾರ್ಯಾಚರಣೆಗೆ ಸ್ಥಳೀಯರು ಅಡ್ಡಿಪಡಿಸುತ್ತಿದ್ದು, ಸರ್ವೆ ಕಾರ್ಯ ಸಾಧ್ಯವಾಗುತ್ತಿಲ್ಲ ಎಂದು ನಿರ್ದೇಶನಾಲಯ ತಿಳಿಸಿರುವ ಹಿನ್ನೆಲೆಯಲ್ಲಿ ಸೋಮವಾರ ಹೈಕೋರ್ಟ್ ವಿಭಾಗೀಯ ಪೀಠವು ಹಂಪಿ ಅಭಿವೃದ್ಧಿ ವಿಶ್ವಪರಂಪರಾ ಪ್ರದೇಶಾಭಿವೃದ್ಧಿ ನಿರ್ವಹಣಾ ಪ್ರಾಧಿಕಾರ ಇಲಾಖೆಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಆದೇಶ ನೀಡಿತ್ತು. ಸೆಪ್ಟೆಂಬರ್ 12ರೊಳಗೆ ಸರ್ವೆ ಕಾರ್ಯ ಮುಗಿಸಿ ಹೈಕೋರ್ಟ್‌ಗೆ ಮಾಹಿತಿ ಸಲ್ಲಿಸಲು ತಿಳಿಸಿರುವ ಕಾರಣ ಭಾರಿ ಬಂದೋಬಸ್ತ್‌ನೊಂದಿಗೆ ಸರ್ವೆ ಕಾರ್ಯ ಆರಂಭವಾಗಿದೆ.

ಪ್ರಾಧಿಕಾರದ ಸಹಕಾರದೊಂದಿಗೆ ಸರ್ವೆ ಕಾರ್ಯ ಆರಂಭವಾಗಿದ್ದು , ನಿಗದಿತ ಸಮಯವಾದ ಸೆ.12ಕ್ಕೆ ಮಾಹಿತಿ ಸಲ್ಲಿಸುವುದಾಗಿ ಭಾರತೀಯ ಸರ್ವೇಕ್ಷಣಾ ಇಲಾಖೆಯ ಅಧಿಕಾರಿ ಕೆಂಪೇಗೌಡ `ಪ್ರಜಾವಾಣಿ~ ಪ್ರತಿನಿಧಿಗೆ ತಿಳಿಸಿದರು.

ಇಲಾಖೆಯ ಶಾಲಿನಿ, ಮುರಳಿ ಹಾಗೂ ಹಂಪಿ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಸುಭಾಷ, ರಾಮಬಾಬು ಮತ್ತು ಯಮುನಾ ನಾಯ್ಕ, ಹಂಪಿ ಗ್ರಾಮ ಪಂಚಾಯ್ತಿ ಪಿಡಿಓ ವಿಜಯಲಕ್ಷ್ಮಿ ಹಾಗೂ ಸಿಬ್ಬಂದಿ ಸರ್ವೆ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.