ADVERTISEMENT

‘ಅತ್ಯಾಚಾರಿಗಳು ರಾಜ್ಯಕ್ಕೆ ಬರುವುದು ಬೇಡ’

ವೇಣುಗೋಪಾಲ್, ವಿಷ್ಣುನಾಥನ್‌ ವಿರುದ್ಧ ಅರವಿಂದ ಲಿಂಬಾವಳಿ ಟೀಕಾಸ್ತ್ರ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2017, 19:30 IST
Last Updated 9 ನವೆಂಬರ್ 2017, 19:30 IST
‘ಅತ್ಯಾಚಾರಿಗಳು ರಾಜ್ಯಕ್ಕೆ ಬರುವುದು ಬೇಡ’
‘ಅತ್ಯಾಚಾರಿಗಳು ರಾಜ್ಯಕ್ಕೆ ಬರುವುದು ಬೇಡ’   

ಮಂಗಳೂರು: ಕಾಂಗ್ರೆಸ್‌ ರಾಜ್ಯ ಉಸ್ತುವಾರಿಗಳಾದ ಕೆ.ಸಿ. ವೇಣುಗೋಪಾಲ್ ಹಾಗೂ ವಿಷ್ಣುನಾಥನ್‌ ಅತ್ಯಾಚಾರ ಎಸಗಿರುವ ಆರೋಪ ಎದುರಿಸುತ್ತಿದ್ದು, ಇಂಥವರು ರಾಜ್ಯಕ್ಕೆ ಬರುವುದು ಬೇಡ. ಅವರನ್ನು ವಾಪಸ್‌ ಕರೆಸಿಕೊಳ್ಳಿ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಆಗ್ರಹಿಸಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾ.ಜಿ.ಶಿವಶಂಕರ್‌ ಆಯೋಗವು ಈಗಾಗಲೇ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ವರದಿ ಸಲ್ಲಿಸಿದೆ. ಇಬ್ಬರೂ ಅತ್ಯಾಚಾರ ನಡೆಸಿರುವುದು ಹಾಗೂ ಸೋಲಾರ್‌ ಹಗರಣದಲ್ಲಿ ಭಾಗಿಯಾಗಿರುವುದು ವರದಿಯಲ್ಲಿ ಸ್ಪಷ್ಟವಾಗಿದೆ. ಪಿಣರಾಯಿ ವಿಜಯನ್‌ ಅವರು, ಇಂಥವರ ರಕ್ಷಣೆ ಮಾಡಬಾರದು ಎಂದರು.

ಜಾರ್ಜ್‌ ರಾಜೀನಾಮೆಗೆ ಹೋರಾಟ: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಸಚಿವ ಕೆ.ಜೆ. ಜಾರ್ಜ್‌ ಅವರ ರಾಜೀನಾಮೆಗೆ ಒತ್ತಾಯಿಸಿ, ಬೆಳಗಾವಿ ಅಧಿವೇಶನದಲ್ಲಿ ಆರಂಭದ ದಿನದಿಂದಲೇ ಹೋರಾಟ ಮಾಡಲು ಕೋರ್‌ ಕಮಿಟಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಲಿಂಬಾವಳಿ ತಿಳಿಸಿದರು.

ADVERTISEMENT

ಹುಬ್ಬಳ್ಳಿಯಲ್ಲಿ ಕಾರ್ಯಕ್ರಮ: ಪರಿವರ್ತನಾ ರ‍್ಯಾಲಿಯ ಸಮಾವೇಶ ಡಿಸೆಂಬರ್‌ 21 ರಂದು ಹುಬ್ಬಳ್ಳಿಯಲ್ಲಿ ನಡೆಯಲಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಮುಂದಿನ ಕೋರ್‌ ಕಮಿಟಿ ಸಭೆ ಇದೇ 25ರಂದು ನಡೆಯಲಿದೆ. ವಿಧಾನ ಪರಿಷತ್‌ ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಇತರ ವಿಷಯಗಳ ಕುರಿತು ವಿಸ್ತೃತ ಚರ್ಚೆ ನಡೆಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

***
ಅಭ್ಯರ್ಥಿಗಳ ಆಯ್ಕೆ ಇಲ್ಲ

ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರಗಳಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಮಾಡಲು ಗುರುವಾರ ನಡೆದ ಕೋರ್‌ ಕಮಿಟಿ ಸಭೆಯಲ್ಲಿ ಸಾಧ್ಯವಾಗಿಲ್ಲ.

ಅಭ್ಯರ್ಥಿಗಳ ಆಯ್ಕೆಗಾಗಿ ರಚಿಸಲಾಗಿರುವ ಉಪಸಮಿತಿಗಳ ವರದಿ ಇನ್ನೂ ಸಲ್ಲಿಕೆ ಆಗಬೇಕಿದೆ. ಶೀಘ್ರ ವರದಿ ಸಲ್ಲಿಸಲು ಸೂಚಿಸಲಾಗಿದ್ದು, ನಂತರ ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ ಅವರು, ಪಕ್ಷದ ಉಸ್ತುವಾರಿಗಳಾದ ಮುರಳೀಧರ್ ರಾವ್‌, ಪ್ರಕಾಶ್‌ ಜಾವಡೇಕರ್‌, ಪಿಯೂಷ್‌ ಗೋಯಲ್‌ರ ಮೂಲಕ ಕೇಂದ್ರ ನಾಯಕರಿಗೆ ಪಟ್ಟಿ ಸಲ್ಲಿಸಲಿದ್ದಾರೆ. ನಂತರ ವರಿಷ್ಠರು ತೀರ್ಮಾನ ಕೈಗೊಳ್ಳುವರು ಎಂದು ಅರವಿಂದ ಲಿಂಬಾವಳಿ ತಿಳಿಸಿದರು.

***

ರಾಜ್ಯ ಸರ್ಕಾರದ ವಿರುದ್ಧ ಸದನದ ಒಳಗೆ ಹಾಗೂ ಹೊರಗೆ ಹೋರಾಟ ನಡೆಸಲು ಕೋರ್‌ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಅರವಿಂದ ಲಿಂಬಾವಳಿ, ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.