ಬೆಂಗಳೂರು: ಖಾಸಗಿ ವೈದ್ಯಕೀಯ ಕಾಲೇಜುಗಳ ಲಾಬಿಗೆ ಸರ್ಕಾರ ಮಣಿದಿದ್ದು, ಈ ವರ್ಷವೂ ವೃತ್ತಿಶಿಕ್ಷಣ ಕೋರ್ಸ್ಗಳ ಸೀಟು ಹಂಚಿಕೆ ಪಾರದರ್ಶಕವಾಗಿ ನಡೆಯುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ಗಳ ಸೀಟು ಹಂಚಿಕೆ ಮತ್ತು ಶುಲ್ಕ ನಿಗದಿ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆ ಸಿದ್ದಪಡಿಸಿದ್ದ ಕರಡನ್ನು ಖಾಸಗಿ ವೈದ್ಯಕೀಯ ಕಾಲೇಜುಗಳ ಒಕ್ಕೂಟ ತಿರಸ್ಕರಿಸಿದೆ.
ಕಾಮೆಡ್ – ಕೆ ಕೋಟಾ ಸೀಟುಗಳ ಹಂಚಿಕೆ ಪಾರದರ್ಶಕವಾಗಿ ನಡೆಯ ಬೇಕು. ತೆರವಾಗುವ ಸೀಟುಗಳು ಆಡಳಿತ ಮಂಡಳಿಗಳ ಪಾಲಾಗಬಾರದು. ಸರ್ಕಾರಿ ಕೋಟಾ ಸೀಟುಗಳಿಗೆ ಕೌನ್ಸೆ ಲಿಂಗ್ ನಡೆದ ನಂತರವೇ ಕಾಮೆಡ್ – ಕೆ ಕೌನ್ಸೆಲಿಂಗ್ ನಡೆಯಬೇಕು ಎಂಬುದು ಸೇರಿದಂತೆ ಹಲವು ಷರತ್ತುಗಳನ್ನು ಒಪ್ಪಂದದ ಕರಡಿನಲ್ಲಿ ಸೇರಿಸಲಾಗಿತ್ತು.
ಆದರೆ, ಖಾಸಗಿ ಕಾಲೇಜುಗಳ ಒಕ್ಕೂಟದ ಪದಾಧಿಕಾರಿಗಳು ಇದಕ್ಕೆ ಒಪ್ಪಿಲ್ಲ. ಮುಖ್ಯಮಂತ್ರಿಗಳ ಮೇಲೆ ಒತ್ತಡ ತಂದು ಕರಡು ತಯಾರಿಸಿದ್ದ ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ವಿ.ರಶ್ಮಿ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.
ಅನೇಕ ವರ್ಷಗಳಿಂದ ಭಾಷಾ ಅಲ್ಪಸಂಖ್ಯಾತ ಖಾಸಗಿ ವೈದ್ಯಕೀಯ ಕಾಲೇಜುಗಳು ಪಾರದರ್ಶಕವಾಗಿ ಸೀಟುಗಳನ್ನು ಹಂಚಿಕೆ ಮಾಡಿಲ್ಲ. ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಿಗಬೇಕಾದ ಸೀಟುಗಳನ್ನು ಬೇರೆ ವರ್ಗದವರಿಗೆ ಹಂಚಲಾಗಿದೆ ಎಂಬುದನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಈಚೆಗೆ ಬಹಿರಂಗಪಡಿಸಿತ್ತು.
ಅಲ್ಲದೆ ಏಳು ವೈದ್ಯಕೀಯ ಕಾಲೇಜುಗಳಿಗೆ ನೀಡಿದ್ದ ಅಲ್ಪಸಂಖ್ಯಾತ ಸ್ಥಾನಮಾನದ ಮಾನ್ಯತೆಯನ್ನು ಅಮಾನತುಗೊಳಿಸಲಾಗಿತ್ತು. ಈ ವಿಷಯವನ್ನು ಸಾರ್ವಜನಿಕರ ಮಾಹಿತಿಗಾಗಿ ಕಾಲೇಜುಗಳ ಸೂಚನಾ ಫಲಕದಲ್ಲೂ ಪ್ರಕಟಿಸಬೇಕು ಎಂದು ಸೂಚಿಸಲಾಗಿತ್ತು.
ಈ ಕಾಲೇಜುಗಳು ಕಾನೂನು ಬಾಹಿರವಾಗಿ ಸೀಟುಗಳನ್ನು ಹಂಚಿಕೆ ಮಾಡಿರುವ ಕಾರಣ, ಅವುಗಳಿಗೆ ನೀಡಿರುವ ಅಲ್ಪಸಂಖ್ಯಾತ ಸ್ಥಾನಮಾನ ವನ್ನು ವಾಪಸ್ ಪಡೆಯಲು ಸಿದ್ಧತೆ ನಡೆದಿತ್ತು.
ಇಲಾಖೆಯಲ್ಲಿ ಹಲವು ಸುಧಾರಣೆಗಳನ್ನು ತರುವ ಮೂಲಕ ಪಾರದರ್ಶಕವಾಗಿ ಸೀಟು ಹಂಚಿಕೆ ಮಾಡಲು ಹೊರಟಿದ್ದ ರಶ್ಮಿ ಅವರು ಖಾಸಗಿ ಕಾಲೇಜುಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಸರ್ಕಾರ ಖಾಸಗಿ ಕಾಲೇಜುಗಳ ಒತ್ತಡಕ್ಕೆ ಮಣಿದು ಅವರನ್ನು ರಜೆ ಮೇಲೆ ಕಳುಹಿಸಿದೆ ಎಂಬ ಮಾತುಗಳು ಸಚಿವಾಲಯದಲ್ಲಿ ಕೇಳಿಬರುತ್ತಿವೆ.
ಈ ತಿಂಗಳ 4ರಿಂದ ಅನ್ವಯವಾಗುವಂತೆ ರಶ್ಮಿ ಅವರಿಗೆ 120 ದಿನಗಳ ಶಿಶುಪಾಲನಾ ರಜೆ ಮಂಜೂರು ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಶಿವಶೈಲಂ ಅವರನ್ನು ಹೆಚ್ಚುವರಿಯಾಗಿ ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ರಶ್ಮಿ ಅವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾಗ ಆನ್ಲೈನ್ ಕೌನ್ಸೆಲಿಂಗ್ ಪದ್ಧತಿ ಜಾರಿಗೆ ತರುವ ಮೂಲಕ ಪಾರದರ್ಶಕವಾಗಿ ಸೀಟು ಹಂಚಿಕೆ ಪ್ರಕ್ರಿಯೆ ನಡೆಸಿದ್ದರು. ಆಗಲೂ ಖಾಸಗಿಯವರ ಲಾಬಿಗೆ ಮಣಿದು ಅವರನ್ನು ಎತ್ತಂಗಡಿ ಮಾಡಲಾಗಿತ್ತು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಕಾರ್ಯದರ್ಶಿಯಾಗಿದ್ದಾಗ, ಗ್ರಾಮ ಸಭೆಗಳಲ್ಲಿ ತೆಗೆದುಕೊಳ್ಳುವ ನಿರ್ಣಯ ಗಳನ್ನು ವೆಬ್ಸೈಟ್ನಲ್ಲಿ ಪ್ರಕಟಿಸುವ ಮೂಲಕ ಆನ್ಲೈನ್ನಲ್ಲಿ ಲಭ್ಯವಾಗು ವಂತೆ ಮಾಡಿದ್ದರು. ಜಿಡ್ಡುಗಟ್ಟಿರುವ ಆಡಳಿತ ವ್ಯವಸ್ಥೆಗೆ ಚುರುಕುಮುಟ್ಟಿಸಲು ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದರು. ಇದನ್ನು ಸಹಿಸದ ಚುನಾಯಿತ ಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ತಂದು ವರ್ಗಾವಣೆ ಮಾಡಿಸಿದ್ದರು.
ಈಗ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲೂ ಅದೇ ರೀತಿ ಲಾಬಿಗಳು ನಡೆಯುತ್ತಿವೆ. ಅವುಗಳಿಗೆ ಕಡಿವಾಣ ಹಾಕಿ, ದಕ್ಷ ಅಧಿಕಾರಿಗಳ ಬೆಂಬಲಕ್ಕೆ ನಿಲ್ಲಬೇಕಾಗಿದ್ದ ಸರ್ಕಾರವೇ ಹಾದಿ ತಪ್ಪಿದೆ. ಪ್ರಾಮಾಣಿಕ ಅಧಿಕಾರಿಯ ರಕ್ಷಣೆಗೆ ನಿಲ್ಲಬೇಕಾಗಿದ್ದ ಸರ್ಕಾರ ಖಾಸಗಿ ಕಾಲೇಜುಗಳ ಒತ್ತಡಕ್ಕೆ ಮಣಿದಿರುವುದು ಸರಿಯಲ್ಲ ಎಂದು ಸರ್ಕಾರಿ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರೊಬ್ಬರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.