ADVERTISEMENT

ಅಧಿವೇಶನದೊಂದಿಗೆ ಪ್ರತಿಭಟನೆಗಳೂ ಆರಂಭ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2017, 6:21 IST
Last Updated 13 ನವೆಂಬರ್ 2017, 6:21 IST
ಸುವರ್ಣ ವಿಧಾನಸೌಧದ ಬಳಿಯ ಕೊಂಡಸಕೊಪ್ಪದಲ್ಲಿ ರೈತರ ಪ್ರತಿಭಟನೆ
ಸುವರ್ಣ ವಿಧಾನಸೌಧದ ಬಳಿಯ ಕೊಂಡಸಕೊಪ್ಪದಲ್ಲಿ ರೈತರ ಪ್ರತಿಭಟನೆ   

ಬೆಳಗಾವಿ: ಇಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಜತೆಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳೂ ಚಾಲನೆ ಪಡೆದುಕೊಂಡಿವೆ.

ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ಕೊಂಡಸಕೊಪ್ಪ ಗ್ರಾಮದ ಗುಡ್ಡದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಖಾನಾಪುರ ತಾಲ್ಲೂಕು ನಂದಗಡದ ಸಂಗೊಳ್ಳಿರಾಯಣ್ಣ ಸಮಾಧಿ ಸ್ಥಳದಿಂದ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ನೇತೃತ್ವದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಪಾದಯಾತ್ರೆ ಶೀಘ್ರವೇ ಕೊಂಡಸಕೊಪ್ಪಕ್ಕೆ ಬರಲಿದೆ.

ADVERTISEMENT

ಪ್ರತಿಭಟನೆಗೆ ಬರುತ್ತಿದ್ದ ರೈತರನ್ನು ಬೈಲಹೊಂಗಲ, ಯರಗಟ್ಟಿ, ರಾಮದುರ್ಗ, ರಾಯಬಾಗದಲ್ಲಿ ಪೊಲೀಸರು ತಡೆಯುತ್ತಿದ್ದಾರೆ ಎಂದು ರೈತ ಮುಖಂಡರು ದೂರಿದರು. ಈ ವಿಷಯವಾಗಿ ಪೊಲೀಸ್ ಅಧಿಕಾರಿಗಳೊಂದಿಗೆ ರೈತರು ಮಾತಿನ ಚಕಮಕಿ ನಡೆಸಿದರು.

ಕೆಪಿಎಂಇ ಕಾಯ್ದೆಗೆ ಮನಬಂದಂತೆ ತಿದ್ದುಪಡಿ ಮಾಡಲಾಗುತ್ತಿದೆ ಎಂದು ಆರೋಪಿಸಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ಬಡವರಿಗೆ ಭೂಮಿ ಹಾಗೂ ವಸತಿ ಹಕ್ಕು ನೀಡಬೇಕು ಎಂದು ಒತ್ತಾಯಿಸಿ ಭೂಮಿ ಹಾಗೂ ವಸತಿ ವಂಚಿತರ ಹೋರಾಟ ಸಮಿತಿಯಿಂದ ತಮಟೆ ಚಳವಳಿ ಹಮ್ಮಿಕೊಳ್ಳಲಾಗಿದೆ.

ನಿಷೇಧಾಜ್ಞೆ
ಸುವರ್ಣ ವಿಧಾನಸೌಧದ ಸುತ್ತಲಿನ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹೀಗಾಗಿ ಸುವರ್ಣ ವಿಧಾನಸೌಧ ಬಳಿ ಪ್ರತಿಭಟನೆಗೆ ಅವಕಾಶ ನೀಡಿಲ್ಲ. ಸಮೀಪದ ಸುವರ್ಣ ಗಾರ್ಡನ್ ಬಳಿ ಪ್ರತಿಭಟನೆಗೆ ಪೆಂಡಾಲ್ ವ್ಯವಸ್ಥೆ ಮಾಡಲಾಗಿದೆ. ಕುಡಿಯುವ ನೀರಿನ ಸೌಲಭ್ಯವನ್ನೂ ಮಾಡಲಾಗಿದೆ. ಪ್ರತಿಭಟನಾ ಸ್ಥಳಗಳಲ್ಲಿ ವ್ಯಾಪಕ ಬಂದೋಬಸ್ತ್ ಮಾಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.