ADVERTISEMENT

ಅಪೌಷ್ಟಿಕತೆ ನಿವಾರಣೆಗೆ ಜಿಲ್ಲಾ ಮಟ್ಟದಲ್ಲಿ ಸಮಿತಿ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2012, 19:30 IST
Last Updated 30 ಏಪ್ರಿಲ್ 2012, 19:30 IST
ಅಪೌಷ್ಟಿಕತೆ ನಿವಾರಣೆಗೆ ಜಿಲ್ಲಾ ಮಟ್ಟದಲ್ಲಿ ಸಮಿತಿ
ಅಪೌಷ್ಟಿಕತೆ ನಿವಾರಣೆಗೆ ಜಿಲ್ಲಾ ಮಟ್ಟದಲ್ಲಿ ಸಮಿತಿ   

ಬೆಂಗಳೂರು: ರಾಜ್ಯದಲ್ಲಿ ಗಂಭೀರ ಸ್ವರೂಪ ತಾಳಿರುವ ಅಪೌಷ್ಟಿಕತೆಯನ್ನು ಹೋಗಲಾಡಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಪ್ರತಿ ಜಿಲ್ಲೆಯಲ್ಲೂ ಒಂದು ಸಮಿತಿಯನ್ನು ರಚಿಸಲಾಗುವುದು ಎಂದು ಹೈಕೋರ್ಟ್ ನ್ಯಾಯಮೂರ್ತಿ ಎನ್.ಕೆ.ಪಾಟೀಲ್ ತಿಳಿಸಿದರು.

`ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಸೂಕ್ತ ಪೌಷ್ಟಿಕ ಆಹಾರ ನೀಡುವಂತೆ ಸರ್ಕಾರಕ್ಕೆ ಸೂಚಿಸಲಾಗುವುದು. ಇದರ ಉಸ್ತುವಾರಿಯನ್ನು ಆಯಾ ಜಿಲ್ಲಾಧಿಕಾರಿಗಳಿಗೇ ವಹಿಸಲಾಗುವುದು. ಅಂಗನವಾಡಿಗಳಲ್ಲಿ ಯಾವುದೇ ರೀತಿಯ ಲೋಪ ಕಂಡುಬಂದಲ್ಲಿ ಅದಕ್ಕೆ ಜಿಲ್ಲಾಧಿಕಾರಿಗಳನ್ನೇ ಹೊಣೆ ಮಾಡಲಾಗುವುದು~ ಎಂದು ಹೇಳಿದರು.

ಅಪೌಷ್ಟಿಕತೆ ಕುರಿತು ಹೈಕೋರ್ಟ್‌ನಲ್ಲಿ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಕಾನೂನು ಸೇವಾ ಸಮಿತಿಯ ಅಧ್ಯಕ್ಷರೂ ಆಗಿರುವ ನ್ಯಾ.ಪಾಟೀಲ್ ನೇತೃತ್ವದಲ್ಲಿ ಮುಖ್ಯ ನ್ಯಾಯಮೂರ್ತಿಗಳು ಸಮಿತಿ ರಚನೆ ಮಾಡಿದ್ದಾರೆ.

ಒಂಬತ್ತು ಮಂದಿ ಸದಸ್ಯರ ಈ ಸಮಿತಿಯು ರಾಜ್ಯದಾದ್ಯಂತ  ಸಂಚರಿಸಿ ಅಪೌಷ್ಟಿಕತೆ ಕುರಿತು ಅಧ್ಯಯನ ನಡೆಸುತ್ತಿದೆ. ಇಲ್ಲಿಯವರೆಗೆ ನಡೆದ ಅಧ್ಯಯನದ ಕುರಿತು ಮಾಹಿತಿ ನೀಡಲು ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿದರು.

ವೈದ್ಯಕೀಯ ನೆರವು: `ರಾಜ್ಯದಲ್ಲಿ 68 ಸಾವಿರ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಅವರಿಗೆ ಆದ್ಯತೆ ಮೇರೆಗೆ  ವೈದ್ಯಕೀಯ ನೆರವು ನೀಡಬೇಕು. ಈ ಮಕ್ಕಳ ಪೈಕಿ ಹಲವರು ತೀವ್ರ ಅನಾರೋಗ್ಯ ಪೀಡಿತರಾಗಿದ್ದಾರೆ. ಇವರಿಗೆ ತುರ್ತು ಚಿಕಿತ್ಸೆಯ ಅಗತ್ಯವಿದೆ.
 
ಸಾಮೂಹಿಕ ಚಿಕಿತ್ಸೆ ಬದಲು ಇಂತಹ ಮಕ್ಕಳಿಗೆ ವಿಶೇಷ ಆದ್ಯತೆ ನೀಡಬೇಕು~ ಎಂದು ಅವರು ಸರ್ಕಾರಕ್ಕೆ ಸಲಹೆ ನೀಡಿದರು. `ರಾಯಚೂರು, ಯಾದಗಿರಿ, ಗುಲ್ಬರ್ಗ, ಬೆಳಗಾವಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಪೌಷ್ಟಿಕತೆ ಸಮಸ್ಯೆ ತೀವ್ರವಾಗಿದೆ.
 
ಈ ಸ್ಥಳಗಳಲ್ಲಿ ವಿಶೇಷ ಕಾಳಜಿ ವಹಿಸುವ ಅಗತ್ಯ ಇದೆ. `ಒಂದೊಂದು ಭಾಗಗಳಲ್ಲಿ ಒಂದೊಂದು ರೀತಿಯ ಆಹಾರ ಪದ್ಧತಿ ಇರುವ ಕಾರಣ, ಆಯಾ ಪ್ರದೇಶಕ್ಕೆ ಅನುಗುಣವಾಗಿ ಮಕ್ಕಳಿಗೆ ಆಹಾರ ನೀಡುವತ್ತ ಸರ್ಕಾರ ಗಮನ ಹರಿಸಬೇಕಿದೆ.

`ಇಂತಹ ಮಕ್ಕಳ ಚಿಕಿತ್ಸೆಗಾಗಿ ಪ್ರತಿ ಜಿಲ್ಲಾ ಕೇಂದ್ರದಲ್ಲಿ 60 ಹಾಸಿಗೆಯುಳ್ಳ ಆಸ್ಪತ್ರೆಯನ್ನು ತೆರೆಯುವಂತೆ ಸಮಿತಿಯ ವತಿಯಿಂದ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು~ ಎಂದು ನ್ಯಾ.ಪಾಟೀಲ್ ವಿವರಿಸಿದರು.

ಅಧ್ಯಯನ: ಬೇರೆ ರಾಜ್ಯಗಳು ಹಾಗೂ ವಿದೇಶಗಳಲ್ಲಿ ಅಪೌಷ್ಟಿಕತೆಯ ಸಮಸ್ಯೆ ಹೋಗಲಾಡಿಸಲು ಯಾವ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂಬ ಬಗ್ಗೆ ಸಮಿತಿಯ ವತಿಯಿಂದ ಅಧ್ಯಯನ ನಡೆಸಿ ಆ ಬಗ್ಗೆ ಕೋರ್ಟ್ ಗಮನಕ್ಕೆ ತರಲಾಗುವುದು.

ಈ ಅಧ್ಯಯನದ ಮಧ್ಯಂತರ ವರದಿಯನ್ನು ಜೂನ್ 12ರ ಒಳಗೆ ಹೈಕೋರ್ಟ್‌ಗೆ ನೀಡಲಾಗುವುದು~ ಎಂದು ವಿವರಿಸಿದರು.

`ಮಕ್ಕಳ ಶ್ರೇಯೋಭಿವೃದ್ಧಿಗೆ ದುಡಿಯುತ್ತಿರುವ ಸರ್ಕಾರೇತರ ಸಂಸ್ಥೆಗಳು ಹಾಗೂ ಈ ನಿಟ್ಟಿನಲ್ಲಿ ಆಸಕ್ತಿಯುಳ್ಳ ಸಾರ್ವಜನಿಕರು ಸಮಿತಿಯ ಜೊತೆ ಕೈಜೋಡಿಸುವಂತೆ ಅವರು ಕೋರಿಕೊಂಡರು. ಆಸಕ್ತರು ಏಳು ದಿನಗಳ ಒಳಗೆ ತಮ್ಮ ಸಲಹೆ ಸೂಚನೆಗಳನ್ನು ಸಮಿತಿಗೆ ನೀಡುವಂತೆ ಅವರು ತಿಳಿಸಿದರು.

ಆಸಕ್ತರು ಹೆಚ್ಚಿನ ಮಾಹಿತಿಗೆ 1800-425-25250 ಈ ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು.

ಮಾಹಿತಿಯೇ ಇಲ್ಲ!
`ಅಪೌಷ್ಟಿಕತೆ ನಿವಾರಣೆಗೆ ಅಂಗನವಾಡಿ ಕೇಂದ್ರಗಳಿಗೆ ಹಾಲು, ಹಣ್ಣು ವಿತರಿಸಲಾಗುತ್ತಿದೆ ಎಂದು ಸರ್ಕಾರ ಮೇಲಿಂದ ಮೇಲೆ ಹೇಳುತ್ತಿದೆ. ಆದರೆ ಬೀದರ್‌ನ ಅಂಗನವಾಡಿ ಕಾರ್ಯಕರ್ತರಿಗೆ ಈ ಬಗ್ಗೆ ತಿಳಿದೇ ಇಲ್ಲ. ಇದುವರೆಗೂ ಅಲ್ಲಿ ಇವುಗಳ ಪೂರೈಕೆಯೇ ಆಗಿಲ್ಲವಂತೆ. ನಾವು ಅಲ್ಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ವಿಷಯ ಹೊರಬಿತ್ತು. ಇದು ರಾಜ್ಯ ಸರ್ಕಾರದ ಕಾರ್ಯವೈಖರಿ~ ಎಂದು ನ್ಯಾ.ಪಾಟೀಲ್ ಕಿಡಿ ಕಾರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.