ADVERTISEMENT

ಅಭ್ಯರ್ಥಿಗಳ ಆಯ್ಕೆಗೆ ಮಿಸ್ತ್ರಿ ನೇತೃತ್ವದಲ್ಲಿ ಪರಿಶೀಲನಾ ಸಮಿತಿ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2018, 19:30 IST
Last Updated 1 ಮಾರ್ಚ್ 2018, 19:30 IST

ನವದೆಹಲಿ: ರಾಜ್ಯ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧೆ ಬಯಸಿರುವ ಆಕಾಂಕ್ಷಿಗಳ ಅರ್ಜಿಗಳ ಪರಿಶೀಲನೆ ಹೊಣೆಯನ್ನು ಪಕ್ಷದ ಹಿರಿಯ ಮುಖಂಡ ಮಧುಸೂದನ ಮಿಸ್ತ್ರಿ ಅವರಿಗೆ ವಹಿಸಲಾಗಿದೆ.

ರಾಜ್ಯಸಭೆ ಸದಸ್ಯರಾದ ಛತ್ತೀಸ್‌ಗಡದ ತಾಮ್ರಧ್ವಜ ಸಾಹು, ಲೋಕಸಭೆ ಸದಸ್ಯರಾದ ಅಸ್ಸಾಂನ ಗೌರವ್‌ ಗೊಗೊಯ್‌ ಸಮಿತಿಯಲ್ಲಿರುವ ಇತರ ಇಬ್ಬರು ಸದಸ್ಯರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌, ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಪದನಿಮಿತ್ತ ಸದಸ್ಯರಾಗಿದ್ದಾರೆ.

2013ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಮಿಸ್ತ್ರಿ ಅವರ ಉಸ್ತುವಾರಿಯಲ್ಲೇ ಪಕ್ಷವು ಯಶಸ್ಸನ್ನು ಗಳಿಸಿ ಅಧಿಕಾರ ಪಡೆದಿತ್ತು.

ADVERTISEMENT

ಪ್ರಸಕ್ತ ಚುನಾವಣೆಯಲ್ಲಿ ಪಕ್ಷದ ಟಿಕೆಟ್‌ ಬಯಸಿ ಇದುವರೆಗೆ 850ಕ್ಕೂ ಅಧಿಕ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು, 224 ಕ್ಷೇತ್ರಗಳಲ್ಲಿ ಕಣಕ್ಕಿಳಿಸುವ ಸೂಕ್ತ ಅಭ್ಯರ್ಥಿಗಳ ಪಟ್ಟಿಯನ್ನು ಪರಿಶೀಲನಾ ಸಮಿತಿಯು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ನೀಡಲಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.