ADVERTISEMENT

ಅರ್ಹರಿಗೆ ತಿಂಗಳಲ್ಲಿ ಪಡಿತರ ಚೀಟಿ: ವಿತರಿಸಲು ಆದೇಶ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2011, 19:30 IST
Last Updated 23 ಅಕ್ಟೋಬರ್ 2011, 19:30 IST

ಬೆಂಗಳೂರು: ಅರ್ಜಿ ಸಲ್ಲಿಸಿ ವರ್ಷಗಳು ಕಳೆದಿದ್ದರೂ ಅರ್ಹರಿಗೆ ಪಡಿತರ ಚೀಟಿ ವಿತರಿಸದಿರುವುದು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಹೇಳಿರುವ ರಾಜ್ಯ ಮಾನವ ಹಕ್ಕುಗಳ ಆಯೋಗ, ಅರ್ಹರಿಗೆ ಒಂದು ತಿಂಗಳಲ್ಲಿ ಪಡಿತರ ಚೀಟಿ ವಿತರಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸೂಚಿಸಿದೆ.

ಅರ್ಜಿ ಸಲ್ಲಿಸಿ ಮೂರು ವರ್ಷಗಳು ಸಂದಿದ್ದರೂ ಪಡಿತರ ಚೀಟಿ ವಿತರಣೆಯಾಗದ ಕುರಿತು ಉತ್ತರ ಕನ್ನಡ ಜಿಲ್ಲೆಯ ಕೆಲವು ಬಡವರು ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಡಾ.ಎಸ್.ಆರ್. ನಾಯಕ್ ಅವರಿಗೆ ಇದೇ ಅಕ್ಟೋಬರ್‌ನಲ್ಲಿ ದೂರು ನೀಡಿದ್ದರು.

ದೂರು ಸ್ವೀಕರಿಸಿದ ಆಯೋಗ ಈ ಕುರಿತು ವಿವರಣೆ ನೀಡುವಂತೆ ಜಿಲ್ಲೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿತ್ತು.

ಆಯೋಗದ ಸೂಚನೆಗೆ ಪ್ರತಿಕ್ರಿಯಿಸಿದ ಅಧಿಕಾರಿಗಳು, `ಅನರ್ಹ ಪಡಿತರ ಚೀಟಿಗಳನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ. ಇದು ಪೂರ್ಣಗೊಂಡ ನಂತರವೇ ಹೊಸ ಪಡಿತರ ಚೀಟಿಗಳನ್ನು ವಿತರಿಸಲು ಅನುಮತಿ ನೀಡಬಹುದು ಎಂದು ಇಲಾಖೆ ಇದೇ ಫೆಬ್ರವರಿಯಲ್ಲಿ ಸೂಚಿಸಿದೆ~ ಎಂಬ ಮಾಹಿತಿ ನೀಡಿದರು.

ಈ ಪ್ರಕರಣದ ಕುರಿತು ಆದೇಶ ನೀಡಿದ ಆಯೋಗ, `ಆಹಾರದ ಹಕ್ಕು ರಕ್ಷಿಸುವುದು ಸರ್ಕಾರದ ಆದ್ಯ ಕರ್ತವ್ಯ. ಪಡಿತರ ಚೀಟಿ ನೀಡುವಲ್ಲಿ ವಿಳಂಬ ಮಾಡುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ.
ಈ ಹಿನ್ನೆಲೆಯಲ್ಲಿ ಹೊಸ ಪಡಿತರ ಚೀಟಿಗೆ ಕೋರಿ ಬಂದಿರುವ ಅರ್ಜಿಗಳನ್ನು ಒಂದು ತಿಂಗಳಲ್ಲಿ ವಿಲೇವಾರಿ ಮಾಡಬೇಕು~ ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.